ADVERTISEMENT

ಬೀದರ್: ನಗರದಲ್ಲಿ ನೈರ್ಮಲ್ಯ ಕಾಪಾಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 5:51 IST
Last Updated 26 ಫೆಬ್ರುವರಿ 2026, 5:51 IST
ಬೀದರ್ ನಗರದಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ‘ನಮ್ಮ ಕರ್ನಾಟಕ ಸೇನೆ’ಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಬೀದರ್ ನಗರದಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ‘ನಮ್ಮ ಕರ್ನಾಟಕ ಸೇನೆ’ಯ ಜಿಲ್ಲಾ ಘಟಕದ ಪದಾಧಿಕಾರಿಗಳು ಬೀದರ್‌ನಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು    

ಬೀದರ್: ನಗರದಲ್ಲಿ ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ‘ನಮ್ಮ ಕರ್ನಾಟಕ’ ಸೇನೆ ಆಗ್ರಹಿಸಿದೆ.

ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಬೀದರ್ ಮಹಾನಗರ ಪಾಲಿಕೆಯ ಆಯುಕ್ತರಿಗೆ ಬರೆದ ಮನವಿ ಪತ್ರವನ್ನು ಮಹಾನಗರ ಪಾಲಿಕೆ ಅಧಿಕಾರಿಗೆ ಸಲ್ಲಿಸಿದರು.

ಬ್ರಿಮ್ಸ್ ಆಸ್ಪತ್ರೆ ಸಮೀಪದ ಇಂದಿರಾ ಕ್ಯಾಂಟೀನ್ ಹತ್ತಿರ ಆಸ್ಪತ್ರೆ ಸಿಬ್ಬಂದಿ ಸಿರಿಂಜ್, ಇಂಜೆಕ್ಷನ್, ಬಾಟಲಿ ಹಾಗೂ ಕಸ ತಂದು ಬೀಸಾಡುತ್ತಿದ್ದಾರೆ. ದನ ಕರುಗಳು ತ್ಯಾಜ್ಯ ವಸ್ತು ತಿಂದು ಸಂಕಷ್ಟಕ್ಕೆ ಒಳಗಾಗುತ್ತಿವೆ. ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್‌ ಪಾಟೀಲ್‌ ಜ್ಯಾಂತಿ ಗಮನ ಸೆಳೆದರು.

ADVERTISEMENT

ಕೇಂದ್ರ ಬಸ್ ನಿಲ್ದಾಣ, ಹಳೆಯ ಬಸ್ ನಿಲ್ದಾಣ, ನಾವದಗೇರಿ ಹಾಗೂ ನಗರದ ವಿವಿಧ ಬಡಾವಣೆಗಳಲ್ಲಿ ರಸ್ತೆ ಬದಿಯ ಚರಂಡಿಗಳು ತುಂಬಿ ತುಳುಕುತ್ತಿವೆ. ಕಲುಷಿತ ನೀರಿನ ಹೊಸಲು ವಾಸನೆಯಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಇದೆ ಎಂದು ಹೇಳಿದರು.

ಬೀದರ್ ನಗರವು ಮಹಾನಗರವಾಗಿ ಮೇಲ್ದರ್ಜೆಗೆ ಏರಿದ ನಂತರ ನಗರದಲ್ಲಿ ಮೂಲಸೌಕರ್ಯ ಸುಧಾರಣೆ ಆಗಬಹುದು ಎಂದು ಜನ ನಿರೀಕ್ಷಿಸಿದ್ದರು. ಆದರೆ, ಹಾಗೆ ಆಗಿಲ್ಲ ಎಂದು ತಿಳಿಸಿದರು.
ನಗರದಲ್ಲಿ ಕೂಡಲೇ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸೇನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಉದಯ್‌ ಅಷ್ಟೂರೆ, ಪ್ರಧಾನ ಕಾರ್ಯದರ್ಶಿ ಸಂಜು ಯಾದವ್, ಪ್ರಧಾನ ಸಂಚಾಲಕ ಸುಧಾಕರ್‌ ರಾಠೋಡ್, ಬೀದರ್ ತಾಲ್ಲೂಕು ಅಧ್ಯಕ್ಷ ಅನಿಲ್ ರಾಜಗೀರಾ, ಬೀದರ್ ದಕ್ಷಿಣ ಅಧ್ಯಕ್ಷ ಆದಿತ್ಯ ರೆಡ್ಡಿ, ನಗರ ಅಧ್ಯಕ್ಷ ಸಂತೋಷ್ ಪಾಟೀಲ್‌, ಜಿಲ್ಲಾ ರೈತ ಘಟಕದ ಅಧ್ಯಕ್ಷ ರಾಜಕುಮಾರ್‌ ಸ್ವಾಮಿ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಸಾಯಿಕಿರಣ, ಪ್ರಮುಖರಾದ ರವಿ ಪಾಟೀಲ್‌, ಮಹಾಂತೇಶ್ ಕೋಟೆ, ರಾಜ ಜಮಾದಾರ್, ಸುಧೀರ್ ಹೇಡೆ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.