ADVERTISEMENT

ನೌಕರರ ಭವನ ನವೀಕರಣಕ್ಕೆ ಅಗತ್ಯ ನೆರವು: ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್

ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್ ಭರವಸೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 15:32 IST
Last Updated 18 ಜನವರಿ 2022, 15:32 IST
ಬೀದರ್‌ನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹೊರ ತಂದಿರುವ 2022ನೇ ಸಾಲಿನ ದಿನದರ್ಶಿಕೆ ಹಾಗೂ ಪಾಕೇಟ್ ಡೈರಿ ಬಿಡುಗಡೆ ಮಾಡಿದರು
ಬೀದರ್‌ನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹೊರ ತಂದಿರುವ 2022ನೇ ಸಾಲಿನ ದಿನದರ್ಶಿಕೆ ಹಾಗೂ ಪಾಕೇಟ್ ಡೈರಿ ಬಿಡುಗಡೆ ಮಾಡಿದರು   

ಬೀದರ್: ಪ್ರತಾಪನಗರದಲ್ಲಿನ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನ ನವೀಕರಣದ ಮುಂದುವರಿದ ಕಾಮಗಾರಿಗೆ ಸಾಧ್ಯವಿರುವ ನೆರವು ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಭರವಸೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ 2022ನೇ ಸಾಲಿನ ದಿನದರ್ಶಿಕೆ ಹಾಗೂ ಪಾಕೇಟ್ ಡೈರಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಭವನ ಮಾದರಿಯನ್ನಾಗಿ ಮಾಡುವ ದಿಸೆಯಲ್ಲಿ ಯೋಜನೆ ರೂಪಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಹೇಳಿದರು.

ADVERTISEMENT

ರಾಜ್ಯ ಸರ್ಕಾರಿ ನೌಕರರ ಸಂಘವು ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ನೌಕರರ ಕ್ರೀಡಾಕೂಟ ಸೇರಿದಂತೆ ಸಂಘದ ಚಟುವಟಿಕೆಗಳಿಗೆ ತಮ್ಮ ಬೆಂಬಲ, ಪ್ರೋತ್ಸಾಹ ಸದಾ ಇರಲಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಜಿಲ್ಲಾ ಪಂಚಾಯಿತಿ ನೆರವಿನೊಂದಿಗೆ ಸರ್ಕಾರಿ ನೌಕರರ ಕ್ರೀಡಾಕೂಟ ಆಯೋಜಿಸಲಾಗುವುದು ಎಂದು ಹೇಳಿದರು.

ನವೀಕರಣದ ಮುಂದುವರಿದ ಕಾಮಗಾರಿ ಪೂರ್ಣಗೊಂಡ ನಂತರ ಬೀದರ್‍ನ ಸರ್ಕಾರಿ ನೌಕರರ ಭವನ ಇಡೀ ರಾಜ್ಯದ ಗಮನ ಸೆಳೆಯಲಿದೆ ಎಂದು ತಿಳಿಸಿದರು.

ಸಂಘದಿಂದ ಪ್ರತಿ ವರ್ಷದಂತೆ ಈ ವರ್ಷವೂ 10 ಸಾವಿರ ದಿನದರ್ಶಿಕೆ ಹಾಗೂ 15 ಸಾವಿರ ಪಾಕೇಟ್ ಡೈರಿಗಳನ್ನು ಮುದ್ರಿಸಲಾಗಿದೆ. ದಿನದರ್ಶಿಕೆಯು ಸರ್ಕಾರಿ ರಜೆ, ಹಬ್ಬ ಹರಿ ದಿನಗಳು ಸೇರಿದಂತೆ ಅಗತ್ಯ ಮಾಹಿತಿಗಳನ್ನು ಒಳಗೊಂಡಿದೆ. ಪಾಕೇಟ್ ಡೈರಿಯಲ್ಲಿ ಸಂಸದ, ಶಾಸಕರು, ಜಿಲ್ಲಾ ಪಂಚಾಯಿತಿ ಸದಸ್ಯರು ಸೇರಿ ಜಿಲ್ಲೆಯ ಜನಪ್ರತಿನಿಧಿಗಳು, ತಾಲ್ಲೂಕು, ಜಿಲ್ಲಾಮಟ್ಟದ ಕಚೇರಿಗಳು, ಅಧಿಕಾರಿಗಳ, ತುರ್ತು ಸೇವೆಗಳ ದೂರವಾಣಿ/ಮೊಬೈಲ್ ಸಂಖ್ಯೆಗಳು ಇವೆ. ಇದು, ಸಂಗ್ರಹ ಯೋಗ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಶ್ರೀಕಾಂತ, ಮುಖ್ಯ ಯೋಜನಾ ಅಧಿಕಾರಿ ಶರಣಯ್ಯ ಮಠಪತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಯೋಗೇಶ, ಕಾರ್ಯನಿರ್ವಾಹಕ ಎಂಜಿನಿಯರ್ ರಾಜಕುಮಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಗೌರವ ಸಲಹೆಗಾರ ಅಖಿಕ್ ಅಹಮ್ಮದ್ ಖುರೇಶಿ, ಮಹೇಶ ಮಾಶೆಟ್ಟಿ, ಉಮೇಶ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.