ADVERTISEMENT

ಬೀದರ್‌ ಜಿಲ್ಲೆಯಲ್ಲಿ ಇಲ್ಲ ಹಕ್ಕಿ ಜ್ವರ

ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾಹಿತಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 15:06 IST
Last Updated 8 ಜನವರಿ 2021, 15:06 IST
ಬೀದರ್‌ನಲ್ಲಿ ಶುಕ್ರವಾರ ಹಕ್ಕಿ ಜ್ವರದ ಮುನ್ನೆಚ್ಚರಿಕೆ ಪ್ರಯುಕ್ತ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಜಿಲ್ಲಾಮಟ್ಟದ ಪ್ರಾಣಿಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿಯ ಸಭೆ ನಡೆಸಿದರು
ಬೀದರ್‌ನಲ್ಲಿ ಶುಕ್ರವಾರ ಹಕ್ಕಿ ಜ್ವರದ ಮುನ್ನೆಚ್ಚರಿಕೆ ಪ್ರಯುಕ್ತ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಜಿಲ್ಲಾಮಟ್ಟದ ಪ್ರಾಣಿಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿಯ ಸಭೆ ನಡೆಸಿದರು   

ಬೀದರ್: ಜಿಲ್ಲೆಯಲ್ಲಿ ಹಕ್ಕಿ ಜ್ವರದ ಯಾವುದೇ ಪ್ರಕರಣ ಕಂಡು ಬಂದಿಲ್ಲ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾಮಟ್ಟದ ಪ್ರಾಣಿಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದರು.

ಕೇರಳದ ಕೊಟ್ಯಾಯಂ ಮತ್ತು ಅಲಪ್ಜುಳ ಜಿಲ್ಲೆಗಳಲ್ಲಿ ಕೋಳಿ ಶೀತ ಜ್ವರ, ಹಕ್ಕಿ ಜ್ವರ ರೋಗೋದ್ರೇಕ ದೃಢಪಟ್ಟಿದೆ. ಈ ಪ್ರಯುಕ್ತ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋಳಿ ಶೀತ ಜ್ವರದ ನಿಯಂತ್ರಣ ಮತ್ತು ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಜಿಲ್ಲೆಯಲ್ಲಿ ಅಸ್ವಾಭಾವಿಕವಾಗಿ ಕೋಳಿಗಳು, ವನ್ಯಪಕ್ಷಿಗಳ ಮರಣ ಹೊಂದುವುದು ಕಂಡುಬಂದಲ್ಲಿ ವರದಿ ಸಲ್ಲಿಸಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಎಲ್ಲ ಕುಕ್ಕಟ ಕ್ಷೇತ್ರಗಳಲ್ಲಿ ವಿಶೇಷವಾಗಿ ಪಕ್ಷಿಧಾಮ ಹಾಗೂ ನೀರು ಸಂಗ್ರಹಣ ಸ್ಥಳಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಅಗತ್ಯವಿರುವ ಎಲ್ಲ ಪರಿಕರ ಹಾಗೂ ರಾಸಾಯನಿಕಗಳನ್ನು ಸಂಗ್ರಹಿಸಿ ರೋಗೋದ್ರೇಕ ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ಕ್ಷಿಪ್ರ ಕಾರ್ಯಾಚರಣೆ ತಂಡಗಳನ್ನು ರಚಿಸಿ ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಫಾರಂಗಳ ಒಳ, ಹೊರ ಆವರಣಗಳನ್ನು ರಾಸಾಯನಿಕಗಳಿಂದ ಸ್ವಚ್ಛಗೊಳಿಸಬೇಕು. ಜೈವಿಕ ಸುರಕ್ಷಾ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದರು.

ಜಿಲ್ಲಾ ಮಟ್ಟದ ರೋಗ ನಿಯಂತ್ರಣ ಸಮಿತಿ ಸಭೆ ನಡೆಸಿ, ಮುಂಜ್ರಾಗತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ಹಾಗೂ ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಕೃಷ್ಣಾ ರೆಡ್ಡಿ ಅವರಿಗೆ ನಿರ್ದೇಶನ ನೀಡಿದರು.

ನಗರಸಭೆ ಆಯುಕ್ತ ಈರಣ್ಣ, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ.ಮಲ್ಲಿಕಾರ್ಜುನ ಹಂಚಿನಾಳ, ಪಶು ವೈದ್ಯಾಧಿಕಾರಿ ಗೌತಮ ಅರಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.