ADVERTISEMENT

ಬೀದರ್‌: ಬಂದ್‌ ಇಲ್ಲ, ಮೆರವಣಿಗೆ ಮಾತ್ರ

​ಪ್ರಜಾವಾಣಿ ವಾರ್ತೆ
Published 7 ಜನವರಿ 2020, 15:58 IST
Last Updated 7 ಜನವರಿ 2020, 15:58 IST

ಬೀದರ್: ರಾಷ್ಟ್ರೀಯ ಹಿತಾಸಕ್ತಿಗೆ ಮಾರಕವಾದ ನಿಲುವು ತಳೆದಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಕಾರ್ಮಿಕ ಸಂಘಟನೆಗಳು ಭಾರತ ಬಂದ್‌ಗೆ ಕರೆ ನೀಡಿದರೂ ಬೀದರ್‌ ಜಿಲ್ಲೆಯಲ್ಲಿ ಬಂದ್‌ಗೆ ಕರೆ ನೀಡಿಲ್ಲ. ಇಲ್ಲಿಯ ಕಾರ್ಮಿಕ ಸಂಘಟನೆಗಳು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಲು ನಿರ್ಧರಿಸಿವೆ.

ಕೇಂದ್ರ ಬಸ್‌ ನಿಲ್ದಾಣದ ಆವರಣದಿಂದ ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ಆರಂಭಿಸಿ ಅಂಬೇಡ್ಕರ್‌ ವೃತ್ತಕ್ಕೆ ಬರಲಿದ್ದಾರೆ. ಅಲ್ಲಿ ಅಂಗನವಾಡಿ ಕಾರ್ಯಕರ್ತರು, ಕಿಸಾನಸಭಾ, ರೈತ ಸಂಘದ ಕಾರ್ಯಕರ್ತರೂ ಸೇರಲಿದ್ದಾರೆ. ಅಂದಾಜು ಒಂದು ಸಾವಿರ ಕಾರ್ಯಕರ್ತರು ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಲಿದ್ದಾರೆ.

‘ಕಾರ್ಮಿಕ ಸಂಘಟನೆಗಳ ಸೂಚನೆಯ ಮೇರೆಗೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆಯನ್ನು ಕಡಿಮೆ ಮಾಡಬೇಕು. ಇವುಗಳನ್ನು ಸಹಕಾರ ಸಂಘಗಳ ಮೂಲಕ ವಿತರಣೆ ಮಾಡಬೇಕು. ಸ್ವಾಮಿನಾಥನ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಮಿಕ ಮುಖಂಡ ಬಾಬುರಾವ್‌ ಹೊನ್ನಾ ತಿಳಿಸಿದ್ದಾರೆ.

ADVERTISEMENT

‘ಬುಧವಾರ ಶಾಲೆಗಳಿಗೆ ರಜೆ ಘೋಷಿಸಿಲ್ಲ. ಮೇಲಧಿಕಾರಿಗಳಿಂದಲೂ ಯಾವುದೇ ಆದೇಶ ಬಂದಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಹೇಳಿದ್ದಾರೆ.

‘ಕಾರ್ಮಿಕ ಸಂಘಟನೆಗಳು ಸಾಂಕೇತಿವಾಗಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿವೆ. ಅದಕ್ಕಾಗಿ ಅಗತ್ಯ ಬಂದೋಬಸ್ತ್‌ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಶ್ರೀಧರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.