ಬೀದರ್: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ರಾಜ್ಯದ ವಿವಿಧೆಡೆ ಗುರುವಾರ ಪ್ರತಿಭಟನೆ ನಡೆದರೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ ನಡೆಯಲಿಲ್ಲ.
ಎರಡು ದಿನಗಳ ಹಿಂದೆಯೇ ನಗರದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಹೀಗಾಗಿ ಯಾವ ಸಂಘಟನೆಯೂ ಬಂದ್ಗೆ ಕರೆ ನೀಡಿರಲಿಲ್ಲ.
ಜಿಲ್ಲೆಯಲ್ಲಿ ಜನಜೀವನ ಸಹಜವಾಗಿತ್ತು. ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಬಸ್ ಹಾಗೂ ಆಟೊ ಸಂಚಾರ ಎಂದಿನಂತೆ ಇತ್ತು. ಆದರೂ, ಪೊಲೀಸರು ಬಂದೋಬಸ್ತ್ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು.
ಬಸವಕಲ್ಯಾಣದಲ್ಲಿ ಶಾಸಕ ಬಿ.ನಾರಾಯಣರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳ ಮುಖಂಡರು ಯೋಚಿಸಿದ್ದರು. ಜಿಲ್ಲಾ ಆಡಳಿತ ಮೂರು ದಿನ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಕಾರಣ ಅಂತಿಮ ಕ್ಷಣದಲ್ಲಿ ಪ್ರತಿಭಟನೆ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.
ಬೀದರ್ ನಗರದಲ್ಲಿ ನವೆಂಬರ್ 13 ರಂದು ವಿವಿಧ ಸಂಘಟನೆಗಳ ಕಾರ್ಯಕರ್ತರು ಜಮಿಯತ್ ಉಲಮಾ ಎ ಹಿಂದ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.
ಮಾಜಿ ಶಾಸಕ ಸೈಯದ್ ಜುಲ್ಫೇಕಾರ್ ಹಾಸ್ಮಿ, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಮಹಮ್ಮದ್ ಅಸದುದ್ದಿನ್, ಎಐಎಂಐಎಂ ಬೀದರ್ ಘಟಕದ ಅಧ್ಯಕ್ಷ ಸೈಯದ್ ಮನ್ಸೂರ್ ಖಾದ್ರಿ, ಜಮಿಯತ್ ಉಲಮಾ ಎ ಹಿಂದ್ ಪ್ರಧಾನ ಕಾರ್ಯದರ್ಶಿ ಮೌಲಾನಾ ಮುಹಮ್ಮದ್ ತಸದ್ದುಕ್ ನದ್ವಿ, ನಗರಸಭೆ ಮಾಜಿ ಸದಸ್ಯ ನಬಿ ಖುರೇಶಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಬುರಾವ್ ಹೊನ್ನಾ, ವಹೀದ್ ಲಖನ್, ಸೈಯದ್ ಸರಫರಾಜ್ ಹಾಸ್ಮಿ ಹಾಗೂ ಜಫರುಲ್ಲಾಖಾನ್ ನೇತೃತ್ವ ವಹಿಸಿದ್ದರು.
ಡಿಸೆಂಬರ್ 17 ರಂದು ಸ್ಟುಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾದ (ಎಸ್ಐಒ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.