ADVERTISEMENT

ನಿಯಮ ಮೀರಿ ಹೋಮ್ ಐಸೊಲೇಷನ್ ಬೇಡ

ಜಿಲ್ಲೆಯಾದ್ಯಂತ ಕೋವಿಡ್ ರ್‍ಯಾಟ್ ಪರೀಕ್ಷೆ ಅಭಿಯಾನ: ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಮೇ 2021, 4:20 IST
Last Updated 21 ಮೇ 2021, 4:20 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಕೋವಿಡ್‍ಗೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಕೋವಿಡ್‍ಗೆ ಸಂಬಂಧಿಸಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು   

ಬೀದರ್: ಜ್ವರ, ಕೆಮ್ಮು, ನೆಗಡಿ, ಮೈ-ಕೈ ನೋವು ಲಕ್ಷಣ ಹೊಂದಿದವರಿಗೆ ಕೋವಿಡ್ ರ್‍ಯಾಟ್ ಪರೀಕ್ಷೆ ಅಭಿಯಾನ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಹೇಳಿದರು.

ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿಗೆ ಸಂಬಂಧಿಸಿದಂತೆ ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.

ಆರೋಗ್ಯ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಸಮೀಕ್ಷೆ ನಡೆಸುವಾಗ ಯಾರಿಗಾದರೂ ನೆಗಡಿ, ಜ್ವರ, ಕೆಮ್ಮು, ಮೈ-ಕೈ ನೋವು ಹಾಗೂ ಇತರ ಲಕ್ಷಣಗಳು ಕಂಡು ಬಂದರೆ ಸ್ಥಳದಲ್ಲಿಯೇ ರ್‍ಯಾಟ್ ಪರೀಕ್ಷೆ ನಡೆಸಬೇಕು. ಕೋವಿಡ್ ದೃಢಪಟ್ಟವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ಆರೋಗ್ಯ ಇಲಾಖೆಯ ಎಲ್ಲ ನೌಕರರು ಮತ್ತು ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆ ಪಡೆದುಕೊಂಡಿರುವ ಬಗ್ಗೆ ಮತ್ತೊಮ್ಮೆ ಪರಿಶೀಲಿಸಬೇಕು. ಮೊದಲ ಡೋಸ್ ಪಡೆದವರಿಗೆ ತಪ್ಪದೇ ಎರಡನೇ ಡೋಸ್ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಕೊರೊನಾ ಸೋಂಕಿತರು ಕೋವಿಡ್ ನಿಯಮ ಮೀರಿ, ಹೋಮ್ ಐಸೊಲೇಷನ್‍ನಲ್ಲಿ ಇರಬಾರದು. ಅದರಿಂದ ಮನೆಯಲ್ಲಿರುವ ಇತರರಿಗೆ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಅಂಥವರಿಗೆ ಮನವರಿಕೆ ಮಾಡಿ ಕೋವಿಡ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್ ಮಾತನಾಡಿ, ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೋಮ್ ಐಸೊಲೇಷನ್‍ನಲ್ಲಿ ಇರುವ ಅಂಗವಿಕಲರಿಗೆ ಸಂಚಾರ ಸೇರಿದಂತೆ ಎಲ್ಲ ರೀತಿಯ ಅನುಕೂಲ ಕಲ್ಪಿಸಬೇಕು. ಅವರು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆಯೇ ಎನ್ನುವುದನ್ನು ಖಚಿತಪಡಿಸಿಕೊಳ್ಳ ಬೇಕು. ಗ್ರಾಮ ಪಂಚಾಯಿತಿಯಲ್ಲಿ ಇರುವ ಎಲ್ಲ ಸ್ವಚ್ಛತಾ ಕಾರ್ಮಿಕರಿಗೆ ತಪ್ಪದೆ ಲಸಿಕೆ ಕೊಡಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಮಾತನಾಡಿ, ಹೃದಯ ಕಾಯಿಲೆ, ಎಚ್ಐವಿ, ಕ್ಯಾನ್ಸರ್, ಕಿಡ್ನಿ ವೈಫಲ್ಯದಂತಹ ಕಾಯಿಲೆ ಹೊಂದಿದವರಿಗೆ ಕೋವಿಡ್ ಲಸಿಕೆ ಪಡೆಯುವ ಬಗ್ಗೆ ಗೊಂದಲಗಳಿರುವುದು ಗೊತ್ತಾಗಿದೆ. ಈ ಬಗ್ಗೆ ವೈದ್ಯರು ತಿಳಿವಳಿಕೆ ಮೂಡಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಪೌರಾಯುಕ್ತ ರವೀಂದ್ರನಾಥ ಅಂಗಡಿ, ತಹಶೀಲ್ದಾರ್ ಗಂಗಾದೇವಿ, ಡಿಎಚ್‍ಒ ಡಾ. ವಿ.ಜಿ. ರೆಡ್ಡಿ, ಬ್ರಿಮ್ಸ್ ನಿರ್ದೇಶಕ ಡಾ. ಶಿವಕುಮಾರ ಸಿ.ಆರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.