ಔರಾದ್ನಲ್ಲಿ ನಡೆದ ತಾಲ್ಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಗೈರು ಖಾಲಿ ಕುರ್ಚಿಗಳ ಮೂಲಕ ಎದ್ದು ಕಾಣುತ್ತಿತ್ತು
ಔರಾದ್: ಪಟ್ಟಣದಲ್ಲಿ ಮಂಗಳವಾರ ನಡೆದ ತಾಲ್ಲೂಕು ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಗೈರಾಗಿದ್ದು, ತೀವ್ರ ಅಸಮಾಧಾನ ವ್ಯಕ್ತವಾಯಿತು.
ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ ‘ಅಧಿಕಾರಿಗಳು ಇಂತಹ ಮಹತ್ವದ ಸಭೆಗೆ ತಪ್ಪದೇ ಬರಬೇಕು. ಆದರೆ ಸಾಕಷ್ಪು ಇಲಾಖೆ ಅಧಿಕಾರಿಗಳು ಬಾರದಿರುವುದು ಖಾಲಿ ಖುರ್ಚಿಗಳೇ ಹೇಳುತ್ತಿವೆ. ಕೆಲ ಇಲಾಖೆ ಅಧಿಕಾರಿಗಳು ತಮ್ಮ ಬದಲು ತಮ್ಮ ಅಧೀನ ಅಧಿಕಾರಿಗಳಿಗೆ ಕಳುಹಿಸುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಭೆಗೆ ಗೈರು ಆದವರಿಗೆ ನೋಟಿಸ್ ಜಾರಿ ಮಾಡುವಂತೆ ತಿಳಿಸಿದರು.
‘ಚುನಾವಣೆ ಆಗದ ಕಾರಣ ತಾಲ್ಲೂಕು ಪಂಚಾಯತ್ನಲ್ಲಿ ಜನಪ್ರತಿನಿಧಿಗಳ ಆಡಳಿತ ಇರುವುದಿಲ್ಲ. ಹೀಗಾಗಿ ಆಡಳಿತಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಬೇಕಾಗುತ್ತದೆ. ಇಂತಹ ಸಭೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದು ಸರಿಯಲ್ಲ’ ಎಂದು ತಾಲ್ಲೂಕು ಪಂಚಾಯತ್ ಇಒ ಶಿವಕುಮಾರ ಘಾಟೆ ಹೇಳಿದರು.
‘ಸರ್ಕಾರದ ಯೋಜನೆಗಳು ಸರಿಯಾಗಿ ಮುಟ್ಟಿಸಬೇಕು. ಆದರೆ ಅನೇಕ ಯೋಜನೆಗಳ ಬಗ್ಗೆ ಜನರಿಗೆ ಗೊತ್ತಿಲ್ಲ. ಗೊತ್ತು ಮಾಡುವ ಕೆಲಸ ನಿಮ್ಮದು’ ಎಂದು ಯೋಜನಾ ನಿರ್ದೇಶಕರು ಸೂಚಿಸಿದರು.
ಶಾಲೆಗಳಲ್ಲಿ ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಕೃಷಿ ಹಾಗೂ ತೋಟಗಾರಿಕೆ, ಮೀನುಗಾರಿಕೆ ಇಲಾಖೆ ಯೋಜನೆಗಳು ಜನರಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು. ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖೆ ಪ್ರಗತಿ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.