ಬೀದರ್: ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾ ಚುನಾವಣಾಧಿಕಾರಿಗಳು ಸಭೆ ನಡೆಸಿದರು.
ಮಾದರಿ ನೀತಿ ಸಂಹಿತೆ ಪಾಲನೆ ಮಾಡುವುದು. ಪೂರ್ವಾನುಮತಿ ಪಡೆದು ಕಾರ್ಯಚಟುವಟಿಕೆಗಳನ್ನು ನಡೆಸುವುದು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದರ ಬಗ್ಗೆ ಸಭೆಯಲ್ಲಿ ತಿಳಿವಳಿಕೆ ನೀಡಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ‘ಚುನಾವಣಾ ಆಯೋಗದ ನಿರ್ದೇಶನದಂತೆ ರಾಜಕೀಯ ಪಕ್ಷಗಳು ಯಾವುದೇ ರೀತಿಯ ಸಭೆ, ಸಮಾರಂಭ, ಕಾರ್ಯಕ್ರಮ ನಡೆಸಲು ಮತ್ತು ವಾಹನ ಬಳಸಲು ಅನುಮತಿ ಪಡೆಯಬೇಕು. ಅನುಮತಿ ಇಲ್ಲದೇ ಯಾವುದೇ ಕಾರ್ಯಕ್ರಮ, ಸಭೆ-ಸಮಾರಂಭ ನಡೆಸಬಾರದು. ಪ್ರಚಾರಕ್ಕೆ ಬಳಸಲಾಗುವ ಸಾಮಗ್ರಿಗಳಿಗೂ ಅನುಮತಿ ಪಡೆಯಬೇಕು’ ಎಂದು ತಿಳಿಸಿದರು.
ಜಿಲ್ಲಾ ಚುನಾವಣಾಧಿಕಾರಿ ಎಚ್.ಆರ್.ಮಹಾದೇವ ಮಾತನಾಡಿ, ‘ಅಭ್ಯರ್ಥಿಗಳು ಪ್ರಚಾರ ಸಾಮಗ್ರಿಗಳ ಮುದ್ರಣಕ್ಕಾಗಿ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಪ್ರಚಾರ ಕೈಗೊಳ್ಳಲು ಪೂರ್ವಾನುಮತಿ ಪಡೆಯಬೇಕು. ಅಭ್ಯರ್ಥಿಗಳು ಅಥವಾ ಪಕ್ಷದ ವ್ಯಕ್ತಿ ಅನುಮತಿ ಪಡೆದು ಬೇರೆಯವರಿಗೆ ಬಳಸಲು ಅವಕಾಶ ನೀಡಬಾರದು’ ಎಂದು ಹೇಳಿದರು.
ಚುನಾವಣಾ ವೆಚ್ಚದ ನೋಡಲ್ ಅಧಿಕಾರಿ ಅಶೋಕ ವಡಗಾಂವೆ ಮಾತನಾಡಿ, ‘ಚುನಾವಣೆಯ ಸಂದರ್ಭದಲ್ಲಿ ಅಭ್ಯರ್ಥಿಗಳು ಮಾಡುವ ವೆಚ್ಚಗಳ ಮೇಲೆ ನಿಗಾ ಇಡಲಾಗಿದೆ. ಆದ್ದರಿಂದ ವೆಚ್ಚಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಇಟ್ಟುಕೊಳ್ಳಬೇಕು’ ಎಂದು ತಿಳಿಸಿದರು.
ಮತಯಂತ್ರಗಳ ಪ್ರಾತ್ಯಕ್ಷಿಕೆ: ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ಚುನಾವಣಾ ಮಾಸ್ಟರ್ ಟ್ರೇನರ್ ರಮೇಶ ಮಠಪತಿ ಮಾಹಿತಿ ನೀಡಿದರು. ಚುನಾವಣಾ ಸಾಮಾನ್ಯ ವೀಕ್ಷಕರಾದ ಸವೀನ್ ಬನ್ಸಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.