ಭಾಲ್ಕಿ: ‘ವಿವಿಧತೆಯಲ್ಲಿ ಏಕತೆಯೇ ನಮ್ಮ ರಾಷ್ಟ್ರದ ವಿಶೇಷತೆ. ಇದನ್ನು ಅರಿತುಕೊಂಡು ನಾವೆಲ್ಲರೂ ರಾಷ್ಟ್ರಧರ್ಮವನ್ನು ಚಾಚೂ ತಪ್ಪದೇ ಪಾಲಿಸಬೇಕು’ ಎಂದು ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮಹಾನ್ ಸ್ವಾತಂತ್ರ್ಯ ಹೋರಾಟಗಾರರ, ಕ್ರಾಂತಿಕಾರಿಗಳ, ಸಾಹಿತಿಗಳ ವಿಶಿಷ್ಟ ಕೊಡುಗೆಯಿಂದಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ಅವರೆಲ್ಲರ ತ್ಯಾಗಮಯ ಬದುಕು ನಮ್ಮೆಲ್ಲರಿಗೂ ಮಾದರಿ ಆಗಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ,‘ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಮ್ಮ ದೇಶ ವಿಶ್ವಗುರು ಆಗುತ್ತಿದೆ’ ಎಂದರು.
ವಂದೇ ಮಾತರಂ ಶಾಲೆಯ ನಿರ್ದೇಶಕ ಶಿವಾನಂದ ದಾಡಗೆ ವಿಶೇಷ ಉಪನ್ಯಾಸ ನೀಡಿದರು. ಪ್ರಥಮ ದರ್ಜೆ ಗುತ್ತಿಗೆದಾರ ಚನ್ನಬಸವ ಬಳತೆ ಜಿ.ಪಿ.ರಾಜರತ್ನಂ ವಿರಚಿತ ಸ್ವತಂತ್ರ ಭಾರತದ ಅಶೋಕ ಚಕ್ರ ಧ್ವಜ ಗ್ರಂಥ ಲೋಕಾರ್ಪಣೆಗೊಳಿಸಿದರು.ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಸಂಸ್ಥೆಯ ನಿರ್ದೇಶಕ ಸೋಮನಾಥಪ್ಪ ಅಷ್ಟೂರೆ, ಶಶಿಧರ ಕೋಸಂಬೆ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ ಇದ್ದರು. ಲಕ್ಷ್ಮೀಬಾಯಿ ಸಿದ್ದಬಟ್ಟೆ ಅವರ ವಿಶೇಷ ಸನ್ಮಾನ ಜರುಗಿತು. ಶಾಲಾ, ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಮಲ್ಲಗಂಬ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದವರ ಮನ ಸೆಳೆದವು. ಲಕ್ಷ್ಮಣ ಮೇತ್ರೆ ನಿರೂಪಿಸಿದರು. ಮಧುಕರ ಗಾಂವ್ಕರ್ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.