ಚಿಟಗುಪ್ಪ: ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಹಾಗೂ ಸ್ಥಳೀಯ ಪುರಸಭೆ ಆಶ್ರಯದಲ್ಲಿ ಒಂದು ವಾರದಿಂದ ಪಟ್ಟಣದಲ್ಲಿ ಕೋವಿಡ್ ಅರಿವು ಮೂಡಿಸುವ ಕಾರ್ಯ ನಡೆದಿದೆ.
ನಿತ್ಯ ಬೆಳಿಗ್ಗೆ ಮತ್ತು ಸಂಜೆ ಗಾಂಧಿ ವೃತ್ತ, ಶಿವಾಜಿ ವೃತ್ತ, ನೆಹರೂ ವೃತ್ತಗಳಲ್ಲಿ ಅಧಿಕಾರಿಗಳು ನಿಂತುಕೊಂಡು ಸಂಚರಿಸುವ ನಾಗರಿಕರಿಗೆ ಕೋವಿಡ್ ಅರಿವು ಮೂಡಿಸುವುದರ ಜೊತೆಗೆ ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡುತ್ತಿದ್ದಾರೆ.
ಅಂಗಡಿ ಮಾಲೀಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು ಹಾಗೂ ಗ್ರಾಹಕರಿಗೆ ಮಾಸ್ಕ್ ಧರಿಸಿ ಬರುವಂತೆ ಮಾಹಿತಿ ನೀಡಬೇಕು ಎಂಬ ಸೂಚನೆ ನೀಡಿದ್ದಾರೆ. ತಪ್ಪಿದಲ್ಲಿ ಅಂಗಡಿ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
‘ಪಟ್ಟಣದಲ್ಲಿ ಕಳೆದ ಎರಡು ದಿನಗಳಲ್ಲಿ ಮಾಸ್ಕ್ ಧರಿಸದಕ್ಕೆ ಒಟ್ಟು 132 ನಾಗರಿಕರಿಂದ ₹11 ಸಾವಿರ ದಂಡ ವಸೂಲಿ ಮಾಡಲಾಗಿದೆ ಹಾಗೂ ಕೋವಿಡ್ ಜಾಗೃತಿ ಬಗ್ಗೆ ಸೂಕ್ತ ತಿಳಿವಳಿಕೆ ನೀಡಲಾಗಿದೆ’ ಎಂದು ಪುರಸಭೆ ಪರಿಸರ ಎಂಜಿನಿಯರ್ ಪೂಜಾ ತಿಳಿಸಿದರು.
ಪುರಸಭೆ ಕಚೇರಿಯಲ್ಲಿ ಶುಕ್ರವಾರ ವೈದ್ಯಾಧಿಕಾರಿ ಡಾ.ಕಿರಣ ಪಾಟೀಲ, ಮುಖ್ಯಾಧಿಕಾರಿ ಶ್ರೀಪಾದ್ ಅವರ ನೇತೃತ್ವದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸಭೆ ನಡೆಯಿತು.
‘ಆರೋಗ್ಯ ಕಾರ್ಯಕರ್ತರು ಪಟ್ಟಣದ ಪ್ರತಿ ಮನೆಗೂ ಭೇಟಿ ನೀಡಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಹಾಗೂ ಸ್ವಯಂ ಆರೋಗ್ಯ ಸಂರಕ್ಷಣೆ ಕ್ರಮಗಳ ಬಗ್ಗೆ ಮಾಹಿತಿ ನೀಡುವ ಕಾರ್ಯ ಆರಂಭಿಸಲು ಸೂಚಿಸಲಾಗಿದೆ’ ಎಂದು ಡಾ.ಕಿರಣ ಪಾಟೀಲ ಹೇಳಿದರು.
‘ನಾಗರಿಕರು ಆರೋಗ್ಯ ಸಂರಕ್ಷಣೆಗೆ ಪ್ರಥಮ ಆದ್ಯತೆ ನೀಡಬೇಕು. ಎಲ್ಲರೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಭೆ, ಸಮಾರಂಭ, ಮದುವೆ ಇತರ ಕಾರ್ಯಕ್ರಮದಲ್ಲಿ ಜನ ಸೇರದಂತೆ ನೋಡಿಕೊಳ್ಳಬೇಕು. ವೈಯಕ್ತಿಕ ಅಂತರ ಕಾಯ್ದುಕೊಂಡು, ಮುಖಗವಸು ಧರಿಸಿ ನಿತ್ಯದ ಕಾಯಕ ಮಾಡಬೇಕು’ ಎಂದು ತಹಶೀಲ್ದಾರ್ ಜಿಯಾವುಲ್ಲ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.