ಬೀದರ್: ‘ಕುಷ್ಠರೋಗಕ್ಕೆ ಚಿಕಿತ್ಸೆ ಇದೆ. ಜನ ಅದಕ್ಕೆ ಭಯ ಪಡಬೇಕಿಲ್ಲ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ–2025 ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸಿ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕಿದೆ. ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ ಎಂದರು.
ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗವಾಗಿದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಬಹು ಔಷಧಿ ಉಚಿತ ಚಿಕಿತ್ಸಾ ಸೌಲಭ್ಯ ಇದೆ. ಅದರಿಂದ ಗುಣ ಹೊಂದಬಹುದು. ಕುಷ್ಠರೋಗದಿಂದ ಉಂಟಾಗುವ ಅಂಗವೈಕಲ್ಯದ ಬಗ್ಗೆ ನೆರೆ-ಹೊರೆಯ ವ್ಯಕ್ತಿಗಳಿಗೆ ಸೂಕ್ತ ತಿಳಿವಳಿಕೆ ನೀಡಿ, ಅಗತ್ಯ ಚಿಕಿತ್ಸೆ ನೀಡಿ, ಉಪಚರಿಸಿದರೆ ಗುಣಹೊಂದುತ್ತಾರೆ ಎಂದು ತಿಳಿಸಿದರು.
ಜನವರಿ 30ರಂದು ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆಗಳಲ್ಲಿ ಸಂಬಂಧಪಟ್ಟ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕುಷ್ಠರೋಗ ನಿವಾರಿಸಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ ಮಾತನಾಡಿ, ರಾಜ್ಯದಲ್ಲಿ ಕುಷ್ಠರೋಗಿಗಳ ಸಂಖ್ಯೆ ಬಹಳ ಕಡಿಮೆ ಇದೆ. ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಡಿಯಲ್ಲಿ ಜ. 30ರಿಂದ ಫೆಬ್ರುವರಿ 13ರ ವರೆಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡಿ, ಇದನ್ನು ದೂರ ಮಾಡಬೇಕಿದೆ ಎಂದು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಹಮ್ಮದ್ವುದ್ದೀನ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ಮಹಾದೇವ ಮಾಳಗೆ, ಡಾ.ಶಂಕರೆಪ್ಪ ಬೊಮ್ಮಾ, ಡಾ.ರಾಜಶೇಖರ ಪಾಟೀಲ, ಡಾ. ದಿಲೀಪ್ ಡೋಂಗ್ರೆ, ಡಾ. ಅನೀಲ ಚಿಂತಾಮಣಿ, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಶಿವಕುಮಾರ ಸಿದ್ದೇಶ್ವರ, ಡಾ.ರವಿ ಕಲಶಟ್ಟಿ, ಡಾ.ಸಂಗಾರೆಡ್ಡಿ, ಡಾ. ಫಯಾಜ್ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.