ADVERTISEMENT

ಚಿಟಗುಪ್ಪ: ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆಗ್ರಹ

ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಅಂಗನವಾಡಿ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 15:34 IST
Last Updated 12 ಆಗಸ್ಟ್ 2020, 15:34 IST
ಚಿಟಗುಪ್ಪ ತಹಶಿಲ್ದಾರ್ ಜಿಯಾವುಲ್ಲ ಅವರಿಗೆ ಬಿಜೆಪಿ ಮುಖಂಡರು ಬುಧವಾರ ಮನವಿ ಸಲ್ಲಿಸಿದರು
ಚಿಟಗುಪ್ಪ ತಹಶಿಲ್ದಾರ್ ಜಿಯಾವುಲ್ಲ ಅವರಿಗೆ ಬಿಜೆಪಿ ಮುಖಂಡರು ಬುಧವಾರ ಮನವಿ ಸಲ್ಲಿಸಿದರು   

ಚಿಟಗುಪ್ಪ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಅಕ್ರಮವಾಗಿ ಅಂಗನವಾಡಿ ಕಟ್ಟಡ ನಿರ್ಮಿಸಲಾಗುತ್ತಿದೆ. ತಕ್ಷಣ ಕಾಮಗಾರಿ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿ ಪಟ್ಟಣದ ಬಿಜೆಪಿ ಮುಖಂಡರು ತಹಶೀಲ್ದಾರ್ ಜಿಯಾವುಲ್ಲ ಅವರಿಗೆ ಮನವಿ ಸಲ್ಲಿಸಿದರು.

ಪುರಸಭೆ ಮಾಜಿ ಸದಸ್ಯ ಮಲ್ಲಿಕಾರ್ಜುನ ಪಾಟೀಲ ಮಾತನಾಡಿ,‘2019–20ನೇ ಸಾಲಿನ ಕೆಕೆಆರ್‌ಡಿಬಿ ಅನುದಾನದ ಅಡಿಯಲ್ಲಿ ಮಂಜೂರಾದ ಅಂಗನವಾಡಿ ಕಟ್ಟಡವನ್ನು ಆರೋಗ್ಯ ಕೇಂದ್ರದ ಆವರಣದಲ್ಲಿ ನಿರ್ಮಿಸಲು ಆದೇಶ ನೀಡಿರುವುದು ಸರಿಯಲ್ಲ’ ಎಂದು ಹೇಳಿದರು.

ಕಟ್ಟಡ ಕಾಮಗಾರಿ ಆರಂಭಿಸಲು ಪುರಸಭೆಯಿಂದ ಸ್ಥಳ ಹಾಗೂ ಕಟ್ಟಡ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಅಧಿಕಾರಿಗಳು, ಗುತ್ತಿಗೆದಾರರು ನಿಯಮ ಪಾಲನೆ ಮಾಡಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮೋಸ ಮಾಡಿದ್ದಾರೆ ಎಂದು ತಿಳಿಸಿದರು.

ADVERTISEMENT

ಆಸ್ಪತ್ರೆ ಆವರಣದಲ್ಲಿ ಘನತ್ಯಾಜ್ಯ ಸಂಗ್ರಹಿಸುವ ಸ್ಥಳದಲ್ಲಿ ಕಟ್ಟಡ ನಿರ್ಮಾಣವಾಗುತ್ತಿರುವುದರಿಂದ ಚಿಕ್ಕ ಮಕ್ಕಳ ಆರೋಗ್ಯದ ಮೇಲೆ ದುಷ್ಪಾರಿಣಾಮ ಉಂಟಾಗಲಿದೆ ಎಂದರು.

ಪುರಸಭೆ ಮಾಜಿ ಸದಸ್ಯ ಸುಭಾಷ ಕುಂಬಾರ ಮಾತನಾಡಿ,‘ಪಟ್ಟಣ ತಾಲ್ಲೂಕು ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ ಅವರ ವಸತಿ ಗೃಹಗಳ ನಿರ್ಮಾಣಕ್ಕೆ ಸ್ಥಳ ಬೇಕಾಗುತ್ತದೆ. ಆಸ್ಪತ್ರೆ ಆವರಣದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸುವುದು ಕಾನೂನಿಗೆ ವಿರುದ್ಧವಾಗಿದೆ’ ಎಂದರು.

ತಹಶೀಲ್ದಾರ್‍ ಜಿಯಾವುಲ್ಲ ಮನವಿ ಪತ್ರ ಸ್ವಿಕರಿಸಿ ಮಾತನಾಡಿ,‘ತಕ್ಷಣ ಕಾಮಗಾರಿ ಸ್ಥಗಿತಗೊಳಿಸಿ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

ಸೈಯದ್ ನೂರುಲ್ಲ ಇಸ್ಲಾಮ್, ರಾಜಗೋಪಾಲ ಐನಾಪುರ್‍, ಸಚಿನ ಮಠಪತಿ, ಶರಣಪ್ಪ ಗಡಮಿ ಹಾಗೂ ಶಾಂರಾವ ಭುತಾಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.