ಹುಮನಾಬಾದ್: ‘ಮಕ್ಕಳಲ್ಲಿ ಹೊಸ ಪರೀಕ್ಷಾ ವಿಧಾನದ ಅರಿವು ಮೂಡಿಸಲು ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಗೊಂಡಪ್ಪ ಸಿದ್ದಣಗೋಳ ಹೇಳಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಬಾಲಕರ ಪ್ರೌಢ ಶಾಲೆಯಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ, ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹಶಿಕ್ಷಕರ ಸಂಘ
ಹಾಗೂ ಕರ್ನಾಟಕ ರಾಜ್ಯ
ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಹಾಗೂ ತಾಲ್ಲೂಕು ಘಟಕ ಸಹಯೋಗದಲ್ಲಿ ಏರ್ಪಡಿಸಿದ್ದ 2020-21ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸಾರಿಕಾ ಗಂಗಾ ಮಾತನಾಡಿ, ‘ಕೋವಿಡ್ ಸಂಕಷ್ಟದಲ್ಲಿ ಮಕ್ಕಳು ಶಾಲೆಯಿಂದ ದೂರ ಉಳಿಯುವ ಪರಿಸ್ಥಿತಿ ನಿರ್ಮಾಣ ಗೊಂಡಿತ್ತು. ಅವರಿಗೆ ಈ ಹೊಸ ಪರೀಕ್ಷಾ ವಿಧಾನದ ಕುರಿತು ಜಾಗೃತಿ ಮೂಡಿಸುವುದು ಅತಿ ಅವಶ್ಯಕವಾಗಿದ್ದು, ಈ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.
ಶಿಕ್ಷಣ ಸಂಯೋಜಕ ಲೋಕೇಶ, ಕಾಲೇಜಿನ ಉಪ ಪ್ರಾಚಾರ್ಯ ಪರಮೇಶ್ವರ, ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಶೇಖ ಮಹೇಬೂಬ್, ಸಾವಿತ್ರಿಬಾಯಿ ಫುಲೆ ಸಂಘದ ತಾಲ್ಲೂಕು ಅಧ್ಯಕ್ಷೆ ಸುನಿತಾ ಪಾಟೀಲ ಇದ್ದರು.
ನಂತರ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಉರ್ದು ಮಾಧ್ಯಮ ಹಾಗೂ ಕನ್ನಡ ಮಾಧ್ಯಮದ ಒಟ್ಟು 24 ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲಾಯಿತು. ಸಾವಿತ್ರಿಭಾಯಿ ಫುಲೆ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭುವನೇಶ್ವರಿ ನಿರೂಪಿಸಿದರು. ವೀರಾಂತರೆಡ್ಡಿ ಜಂಪಾ ಸ್ವಾಗತಿಸಿದರು. ಬಾಳಾಸಾಹೇಬ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.