ಭಾಲ್ಕಿ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಆದ್ಯತೆ ನೀಡುವುದಾಗಿ ಸಂಸದ ಸಾಗರ್ ಖಂಡ್ರೆ ಹೇಳಿದರು.
ಪಟ್ಟಣದ ಜಿ.ಎಚ್.ಶಿವಮಠ ನಿಡಗುಂದಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಮಹೀಂದ್ರಾ ಆಂಡ್ ಮಹೀಂದ್ರಾ ಕಂಪನಿ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಅಪ್ರೆಂಟಿಸ್ ತರಬೇತಿ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಹೆಚ್ಚು ಕೈಗಾರಿಕೆ ಸ್ಥಾಪಿಸಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ಕೊಡಿಸುವ ಕೆಲಸ ಆಗಬೇಕಿದೆ. ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಐಟಿಐ ಪೂರೈಸಿದವರೆಗೆ ವಿಪುಲ ಅವಕಾಶಗಳಿವೆ. ಹೊಸ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ಹಾಗೂ ಉತ್ಸಾಹ ಇದ್ದರೆ ಇಂತಹ ಕ್ಷೇತ್ರಗಳಲ್ಲಿ ಅವಕಾಶ ಹೆಚ್ಚು ಎಂದು ತಿಳಿಸಿದರು.
ಗಡಿಭಾಗದಲ್ಲಿ ಬಸವಲಿಂಗ ಪಟ್ಟದ್ದೇವರು ಶೈಕ್ಷಣಿಕ ಕ್ರಾಂತಿಗೈದಿದ್ದಾರೆ. ಅವರ ಸಮಾಜ ಸೇವೆ ಎಲ್ಲರಿಗೂ ಪ್ರೇರಣೆಯಾಗಿದೆ. ಅಂತಹ ಪೂಜ್ಯರ ಅಮೃತ ಮಹೋತ್ಸವದ ಸವಿನೆನಪಿಗಾಗಿ ಐಟಿಐ ವಿದ್ಯಾರ್ಥಿಗಳಿಗೆ ಅಪ್ರೆಂಟಿಸ್ ತರಬೇತಿ ಸಂದರ್ಶನ ಏರ್ಪಡಿಸಿರುವುದು ಉತ್ತಮ ಕೆಲಸ ಎಂದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಜಿಲ್ಲಾ ಕಸಾಪದ ಕೋಶಾಧ್ಯಕ್ಷ ಶಿವಶಂಕರ ಟೋಕರೆ ಮಾತನಾಡಿದರು. ಪ್ರಾಚಾರ್ಯ ದೇವರಾಜ ಕುಂಬಾರ, ಮಹೀಂದ್ರಾ ಕಂಪನಿಯ ವ್ಯವಸ್ಥಾಪಕಿ ಯಾಸ್ಮಿನ್, ಸುನಿಲ್, ಸರ್ಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಪ್ರಭು, ಎಸ್ವಿಇ ಐಟಿಐ ಕಾಲೇಜಿನ ಪ್ರಾಚಾರ್ಯ ಸಂಗಪ್ಪ ಹುಲಸೂರೆ, ಪ್ರವೀಣ ಹಿರೇಮಠ, ರಾಜಕುಮಾರ ಕಲಶೆಟ್ಟೆ, ಬಸವರಾಜ ಗೊರನಾಳೆ, ಮಲ್ಲಿಕಾರ್ಜುನ ಮೇತ್ರೆ, ಪ್ರೇಮ ಕೋರಾಳೆ, ಸುರೇಶ ಪುರವಂತ, ರಾಜಕುಮಾರ ಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.