ADVERTISEMENT

ಬೀದರ್‌: ಬಸವ ದಳ ಕಾರ್ಯಕರ್ತರ ಪ್ರತಿಭಟನೆ

ಮಕ್ಕಳಿಗೆ ಮೊಟ್ಟೆ ಕೊಡುವ ಆದೇಶ ಹಿಂಪಡೆಯಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2021, 4:30 IST
Last Updated 1 ಡಿಸೆಂಬರ್ 2021, 4:30 IST
ಕಲ್ಯಾಣ ಕರ್ನಾಟಕದ ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ಕೊಡುವ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು
ಕಲ್ಯಾಣ ಕರ್ನಾಟಕದ ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ಕೊಡುವ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಬಸವ ದಳದ ಕಾರ್ಯಕರ್ತರು ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು   

ಬೀದರ್‌: ಅನುದಾನಿತ ಹಾಗೂ ಸರ್ಕಾರಿ ಶಾಲೆಗಳ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆಗೆ ಕೋಳಿಮೊಟ್ಟೆ ಕೊಡಲು ಸರ್ಕಾರ ಹೊರಡಿಸಿರುವ ಆದೇಶ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ರಾಷ್ಟ್ರೀಯ ಬಸವ ದಳ, ಲಿಂಗಾಯತ ಧರ್ಮ ಮಹಾಸಭಾ ಮತ್ತು ಅಕ್ಕನಾಗಲಾಂಬಿಕಾ ಮಹಿಳಾ ಗಣ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಿ, ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ನೀಡಿದರು.

‘ಕೋಳಿಮೊಟ್ಟೆಯಿಂದ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ. ಸರ್ಕಾರಕ್ಕೆ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ಕಳಕಳಿ ಇದ್ದರೆ ಹಣ್ಣು, ದ್ವಿದಳ ಧಾನ್ಯಗಳು, ಮೊಳಕೆ ಕಾಳು ಮುಂತಾದವನ್ನು ಸರ್ಕಾರ ನೀಡುವ ವ್ಯವಸ್ಥೆ ಮಾಡಬೇಕು’ ಎಂದು ಬಸವ ಮಂಟಪದ ಪ್ರಧಾನ ಸಂಚಾಲಕಿ ಮಾತೆ ಸತ್ಯಾದೇವಿ ಒತ್ತಾಯಿಸಿದರು.

ADVERTISEMENT

ಮೊಟ್ಟೆ ತಿನ್ನುವ ಮಕ್ಕಳು ಮತ್ತು ತಿನ್ನದ ಮಕ್ಕಳೆಂದು ಶಾಲೆಯಲ್ಲಿ ಭೇದಭಾವ ಮೂಡಿಸಿದಂತಾಗುತ್ತದೆ. ಸಸ್ಯಾಹಾರಿ ಪದ್ಧತಿ ಅಳವಡಿಸಿಕೊಂಡವರಿಗೆ ಇದು ಅವಮಾನ ಮಾಡಿದಂತಾಗುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ‘ಈ ಹಿಂದೆ 2007ರಲ್ಲಿ ಸರ್ಕಾರ ಇದೇ ನಿರ್ಧಾರ ಕೈಗೊಂಡಿತ್ತು. ಆದರೆ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಷ್ಟ್ರೀಯ ಬಸವ ದಳದ ಉಗ್ರ ಹೋರಾಟಕ್ಕೆ ಮಣಿದು ನಿರ್ಧಾರ ಕೈಬಿಟ್ಟಿದ್ದರು. ಮತ್ತೆ ಇಂದಿನ ಮುಖ್ಯಮಂತ್ರಿ ಬೊಮ್ಮಾಯಿಯವರು ಈ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ’ ಎಂದರು.

’ಸರ್ಕಾರವು ಮೊಟ್ಟೆ ನೀಡುವ ಆದೇಶ ಹಿಂಪಡೆಯದಿದ್ದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದು ಧನ್ನೂರ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ, ದಳದ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ, ಸಂಘಟನಾ ಕಾರ್ಯದರ್ಶಿ ಬಸವರಾಜ ಸಂಗಮದ, ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲರಾವ್ ಪಾಟೀಲ, ಗಣಪತಿ ಬಿರಾದಾರ, ರಾಜೇಂದ್ರ ಜೊನ್ನಿಕೇರಿ, ಹಾವಶೆಟ್ಟಿ ಪಾಟೀಲ, ವಿಶ್ವನಾಥ ಉದಗೀರೆ, ಮನ್ಮಥಯ್ಯ ಸ್ವಾಮಿ, ರವಿಕಾಂತ ಬಿರಾದಾರ, ಕಲ್ಲಪ್ಪ ದೇಶಮುಖ, ಗಣಪತಿ ದೇಶಮುಖ, ಸಂಗಮೇಶ ಅಳ್ಳಿ, ಸುರೇಶ ಸ್ವಾಮಿ, ವಿವೇಕ ಪಟ್ನೆ, ವಿಶ್ವನಾಥ ಕೋರೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.