ADVERTISEMENT

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಜಾತ್ಯತೀತ ಜನತಾ ದಳದಿಂದ ರಾಜ್ಯಪಾಲರಿಗೆ ಮನವಿ ಪತ್ರ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 14:52 IST
Last Updated 23 ಜೂನ್ 2021, 14:52 IST
ತೈಲ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಾತ್ಯತೀತ ಜನತಾ ದಳದ ಕಾರ್ಯಕರ್ತರು ಬೀದರ್‍ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು
ತೈಲ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಜಾತ್ಯತೀತ ಜನತಾ ದಳದ ಕಾರ್ಯಕರ್ತರು ಬೀದರ್‍ನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು   

ಬೀದರ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಾತ್ಯತೀತ ಜನತಾ ದಳದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಪಕ್ಷದ ಕಚೇರಿಯಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪೊಲೀಸರು ಕೆಲ ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ADVERTISEMENT

ಕೋವಿಡ್ ಮೊದಲ ಹಾಗೂ ಎರಡನೇ ಅಲೆ ನಿಯಂತ್ರಣಕ್ಕೆ ವಿಧಿಸಲಾದ ಲಾಕ್‍ಡೌನ್‍ನಿಂದ ಜನ ಸಂಕಷ್ಟದಲ್ಲಿದ್ದಾರೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯುವ ಕೆಲಸ ಮಾಡಿವೆ ಎಂದು ಆರೋಪಿಸಿದರು.

ಪೆಟ್ರೋಲ್ ಬೆಲೆ ಲೀಟರ್‌ 100ರ ಗಡಿ ದಾಟಿದೆ. ಅಗತ್ಯ ವಸ್ತುಗಳು, ರಸಗೊಬ್ಬರ ಬೆಲೆ ಗಗನಕ್ಕೆ ಏರಿವೆ ಎಂದು ದೂರಿದರು. ಪೆಟ್ರೋಲ್, ಡೀಸೆಲ್, ರಸಗೊಬ್ಬರ, ವಿದ್ಯುತ್ ದರ ಹೆಚ್ಚಳ ಹಿಂಪಡೆಯಬೇಕು. ಕೋವಿಡ್‍ನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ಒದಗಿಸಬೇಕು. ಜಿಲ್ಲೆಯ ಸಹಕಾರ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಕಬ್ಬು ಬಾಕಿ ಹಣ ಕೊಡಿಸಬೇಕು. ಬೀದರ್ ಸಹಕಾರ ಸಕ್ಕರೆ ಕಾರ್ಖಾನೆಗೆ ಅನುದಾನ ಒದಗಿಸಿ ಪುನರಾರಂಭಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಹೋಬಳಿ ಮಟ್ಟದ ಕಚೇರಿಗಳಿಂದ ಹಿಡಿದು ರಾಜ್ಯಮಟ್ಟದವರೆಗಿನ ಕಚೇರಿಗಳ ಎದುರು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ ಸೋಲಪುರ, ಪ್ರಧಾನ ಕಾರ್ಯದರ್ಶಿ ಅಶೋಕ ಕೋಡಗೆ, ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿ ಕಾಳೆ, ನರಸಿಂಗ್ ಸೋನಿ ಮೊದಲಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.