ಬೀದರ್: ಬಸವೇಶ್ವರ ಎಂಟರ್ಪ್ರೈಸೆಸ್ ವಸತಿ ನಿಲಯಗಳಿಗೆ ಆಹಾರ ಸಾಮಗ್ರಿ ಪೂರೈಸುವಲ್ಲಿ ಅಕ್ರಮ ಎಸಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರಜಾಶಕ್ತಿ ಸಮಿತಿ, ವಿಶ್ವ ಕನ್ನಡಿಗರ ಸಂಸ್ಥೆ, ಬಹುಜನ ಜಾಗೃತಿ ವೇದಿಕೆ ಹಾಗೂ ಕಲ್ಯಾಣ ಕರ್ನಾಟಕ ಕಟ್ಟಡ, ಇತರ ನಿರ್ಮಾಣ ಕಾರ್ಮಿಕ ಮಹಾ ಸಂಘದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ವೃತ್ತದಿಂದ ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಎಂಟರ್ಪ್ರೈಸೆಸ್ ಮಾಲೀಕರು ಬೀದರ್, ಭಾಲ್ಕಿ, ಬಸವಕಲ್ಯಾಣದಲ್ಲಿ ಮಾಡಿರುವ ಆಸ್ತಿಯ ತನಿಖೆ ನಡೆಸಬೇಕು. ಕಳಪೆ ಆಹಾರ ಪೂರೈಸಿದರೂ, ಗುಣಮಟ್ಟದ ಆಹಾರ ಒದಗಿಸಲಾಗಿದೆ ಎಂದು ವರದಿ ಸಲ್ಲಿಸಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಬಸವೇಶ್ವರ ಎಂಟರ್ಪ್ರೈಸೆಸ್ಗೆ ಜಿಲ್ಲೆಯಲ್ಲಿ ಒಂದು ವಸತಿ ನಿಲಯಕ್ಕೆ ಮಾತ್ರ ಆಹಾರ ಸಾಮಗ್ರಿ ಪೂರೈಸಲು ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಪ್ರಜಾಶಕ್ತಿ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಸಿಂಧೆ, ವಿಶ್ವ ಕನ್ನಡಿಗರ ಸಂಸ್ಥೆ ರಾಜ್ಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ, ಬಹುಜನ ಜಾಗೃತಿ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮೋಳಕೆರೆ, ಕಲ್ಯಾಣ ಕರ್ನಾಟಕ ಕಟ್ಟಡ, ಇತರ ನಿರ್ಮಾಣ ಕಾರ್ಮಿಕರ ಮಹಾಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೂರ್ಯಕಾಂತ ಸಾಧುರೆ, ಮಹೇಂದ್ರಕುಮಾರ ಹೊಸಮನಿ, ಸತೀಶ್ ಸಕ್ಪಾಲ್ ಮೊದಲಾದವರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.