ಬೀದರ್: ಮೂಲಭೂತ ಸೌಕರ್ಯ, ಸೇವಾ ಸೌಲಭ್ಯ ಒದಗಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಬೀದರ್ ತಾಲ್ಲೂಕು ಘಟಕದವರು ನಗರದಲ್ಲಿ ಸೋಮವಾರ ಮುಷ್ಕರ ನಡೆಸಿದರು.
ಆನಂತರ ತಹಶೀಲ್ದಾರ್ ದಿಲ್ಶದ್ ಮೆಹತ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮೊಬೈಲ್ ಆ್ಯಪ್, ವೆಬ್ ಅಪ್ಲಿಕೇಶನ್ಗಳ ಮೂಲಕ ಹೆಚ್ಚಿನ ಸೌಕರ್ಯ ಕಲ್ಪಿಸಲಾಗುತ್ತಿದೆ. ಆದರೆ, ಇದೇ ವೇಳೆ ಸಿಬ್ಬಂದಿ ಮೇಲೆ ಹೆಚ್ಚಿನ ಕಾರ್ಯಭಾರದ ಒತ್ತಡ ಉಂಟಾಗುತ್ತಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಸಮಸ್ಯೆಗಳಾಗುತ್ತಿವೆ ಎಂದು ಗೋಳು ತೋಡಿಕೊಂಡಿದ್ದಾರೆ.
ಪದೋನ್ನತ್ತಿಯಲ್ಲಿ ಸಾಕಷ್ಟು ಅನ್ಯಾಯವಾಗುತ್ತಿದೆ. ಅನೇಕರು ನಿವೃತ್ತಿ ಅಂಚಿನಲ್ಲಿದ್ದಾರೆ. ಆದರೆ, ಪದೋನ್ನತ್ತಿ ಕೊಟ್ಟಿಲ್ಲ. ಇದನ್ನು ಸರಿಪಡಿಸಬೇಕು. ಪತಿ–ಪತ್ನಿ ಪ್ರಕರಣಗಳಲ್ಲಿ ವರ್ಗಾವಣೆ ಪ್ರಕ್ರಿಯೆ ತ್ವರಿತ ಗತಿಯಲ್ಲಿ ಪೂರ್ಣಗೊಳಿಸಬೇಕು. ಕೆಲಸದ ಅವಧಿ ನಂತರ ವರ್ಚುವಲ್ ಸಭೆಗಳನ್ನು ನಡೆಸದಂತೆ ಆದೇಶ ಹೊರಡಿಸಬೇಕೆಂದು ಆಗ್ರಹಿಸಿದರು.
ಸಂಘದ ಪ್ರಮುಖರಾದ ತಿಪ್ಪೇಶ್, ಭೈರವ, ಲಕ್ಷ್ಮಿ, ಸತ್ತಾರ, ಅನಿಲ್ ಜಾಧವ್, ನಂದಿನಿ, ಮುತ್ತಮ್ಮ, ಜಗದೀಶ್ ಮೊದಲಾದವರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.