ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಅಖಿಲ ಭಾರತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ನೂರಾರು ಜನ ಬೀದರ್ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು –ಪ್ರಜಾವಾಣಿ ಚಿತ್ರ
ಬೀದರ್: ಕೆಲಸದ ಅವಧಿ ಎಂಟು ಗಂಟೆಗೆ ಇಳಿಸುವುದು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರೆ ಕೊಟ್ಟಿರುವ ರಾಷ್ಟ್ರವ್ಯಾಪ್ತಿ ಮುಷ್ಕರವನ್ನು ಬೆಂಬಲಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಅಖಿಲ ಭಾರತ ಕಿಸಾನ್ ಮೋರ್ಚಾದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದಿಂದ ಆರಂಭಗೊಂಡ ಮೆರವಣಿಗೆಯು ಪ್ರಮುಖ ಮಾರ್ಗಗಳ ಮೂಲಕ ಹಾದು ಜಿಲ್ಲಾಧಿಕಾರಿ ಕಚೇರಿ ಎದುರು ಕೊನೆಗೊಂಡಿತು. ರ್ಯಾಲಿಯುದ್ದಕ್ಕೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾರ್ಮಿಕ ಸಂಘಟನೆ, ಕಿಸಾನ್ ಮೋರ್ಚಾ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಅಸಂಘಟಿತ ವಲಯದ ಕಾರ್ಮಿಕರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಆನಂತರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಕೇಂದ್ರ ಸರ್ಕಾರವು ಬಂಡವಾಳಶಾಹಿ ಮತ್ತು ಕಾರ್ಪೊರೇಟ್ನವರ ಒತ್ತಡಕ್ಕೆ ಮಣಿದು ಕಾರ್ಮಿಕ ವಿರೋಧಿಯಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದಿದೆ. ಅನೇಕ ರಾಜ್ಯ ಸರ್ಕಾರಗಳು ಕೆಲಸದ ಅವಧಿಯನ್ನು 8 ಗಂಟೆಯ ಬದಲಾಗಿ 10 ಗಂಟೆಗೆ ಹೆಚ್ಚಿಸಿವೆ. ಕರ್ನಾಟಕ ಸರ್ಕಾರವು ಕೂಡ ಕೇಂದ್ರದ ಹಾದಿಯಲ್ಲಿಯೇ ಮುಂದುವರಿಯುತ್ತಿದೆ. ಈ ನಾಲ್ಕು ಸಂಹಿತೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ನೆಹರೂ ಅವರ ಕಾಲದ ಸಾರ್ವಜನಿಕ ವಲಯದ ಕೈಗಾರಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾರಾಟ ಮಾಡುತ್ತಿದ್ದಾರೆ. ರೈಲ್ವೆ, ಎಲ್ಐಸಿ ಖಾಸಗೀಕರಣ ಮಾಡುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳನ್ನು ವಿಲೀನ ಗೊಳಿಸುತ್ತಿದ್ದಾರೆ. ಸರ್ಕಾರದ ಆಸ್ತಿಯನ್ನು ನಗದೀಕರಣಗೊಳಿಸಲಾಗುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಇದರಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.
ಕಾರ್ಮಿಕ ಹಕ್ಕುಗಳನ್ನು ರದ್ದು ಮಾಡುವುದರ ಮೂಲಕ ಕಾರ್ಮಿಕ ಚಳವಳಿಯನ್ನು ತಡೆಗಟ್ಟಲು ಸರ್ಕಾರ ಮುಂದಾಗಿದೆ. ಈ ಮೂಲಕ ಪ್ರಜಾಪ್ರಭುತ್ವದ ಹಕ್ಕು ಕಸಿದುಕೊಳ್ಳುತ್ತಿದೆ. ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟದ ನೌಕರರ ಸೇವೆ ಕಾಯಂಗೊಳಿಸುವಂತೆ ಹಲವು ಸಲ ಹೋರಾಟ ನಡೆಸಿದರೂ ಕಿವಿಗೆ ಹಾಕಿಕೊಂಡಿಲ್ಲ ಎಂದರು.
ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಂಚಾಲಕ ಬಾಬುರಾವ್ ಹೊನ್ನಾ, ಸಹ ಸಂಚಾಲಕ ಆರ್.ಪಿ.ರಾಜಾ, ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ನಜೀರ್ ಅಹ್ಮದ್, ಮಹೇಶ ನಾಡಗೌಡ, ಎಂ.ಡಿ. ಶಫಾಯತ್ ಅಲಿ, ಬಿ.ವಿ. ಜಗದೀಶ್ವರ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಕಾರ್ಮಿಕ ಸಂಘಗಳು ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ಕೆನರಾ ಬ್ಯಾಂಕ್, ಭಾರತೀಯ ಜೀವ ವಿಮಾ ನಿಗಮ ಕಚೇರಿ ಮತ್ತು ಬ್ಯಾಂಕ್ ಆಫ್ ಇಂಡಿಯಾ ನೌಕರರು ಬೀದರ್ನ ಜನವಾಡ ರಸ್ತೆಯ ಕೆನರಾ ಬ್ಯಾಂಕ್ ಎದುರು ಸೇರಿ, ಮುಷ್ಕರ ನಡೆಸಿದರು.
ಪ್ರಮುಖರಾದ ಶಿವಾಜಿ ಮಾನೆ, ಬಸವರಾಜ ಮಾಳಗೆ, ಸಂತೋಷ್ ಕೋರೆ, ಮಿಲಿಂದ್ ಚಲ್ವಾ, ಸಚಿನ್, ಚೇತನ್ ಸಾಗರ್ ಮತ್ತಿತರರು ಪಾಲ್ಗೊಂಡಿದ್ದರು.
ಅಸಂಘಟಿತ ಕಾರ್ಮಿಕರಾಗಿರುವ ಕಟ್ಟಡ ಕಾರ್ಮಿಕರು, ಗಿಗ್ ಕಾರ್ಮಿಕರಿಗೆ ಎಲ್ಲಾ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಬೇಕು. ಕೃಷಿ ಕಾರ್ಮಿಕರಿಗಾಗಿ ಕಲ್ಯಾಣ ಮಂಡಳಿ ರಚಿಸಬೇಕು. ಬಗರ್ ಹುಕುಂ ಸಾಗುವಳಿದಾರರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಬೇಕು. ಬಿಎಸ್ಎಸ್ಕೆ ಪುನಃ ಆರಂಭಿಸಬೇಕು. ಕಾರ್ಮಿಕರಿಗೆ ಕೊಡಬೇಕಾದ ಬಾಕಿ ಪಾವತಿಸಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.