ADVERTISEMENT

ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಿ

ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 8:54 IST
Last Updated 14 ಫೆಬ್ರುವರಿ 2020, 8:54 IST
ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಮೀಪ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು
ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಮೀಪ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು   

ಬೀದರ್‌: ಮೂರು ದಶಕಗಳಿಂದ ನನೆಗುದಿಗೆ ಬಿದ್ದಿರುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪ ಗುರುವಾರ ಪ್ರತಿಭಟನೆ ನಡೆಸಿದವು.

ಕರ್ನಾಟಕ ರಕ್ಷಣಾ ವೇದಿಕೆ(ರಿ) ಸ್ವಾಭಿಮಾನ ಸೇನೆ, ಕರ್ನಾಟಕ ವಿಶ್ವ ನಿರ್ಮಾಣ ಸೇನೆ ಹಾಗೂ ದಲಿತ ಸಮರ ಸೇನೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿದರು. ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

1983ರಲ್ಲಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ ಕೊಡುವ ದಿಸೆಯಲ್ಲಿ ಡಾ.ಸ ರೋಜಿನಿ ಮಹಿಷಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು. ಸಮಿತಿಯು ಮೂರು ವರ್ಷಗಳ ಸುದೀರ್ಘ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಆದರೆ, ಆಡಳಿತಕ್ಕೆ ಬಂದ ಯಾವ ಸರ್ಕಾರವೂ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿದರು.

ADVERTISEMENT

34 ವರ್ಷಗಳಿಂದ ಸರೋಜಿನಿ ಮಹಿಷಿ ವರದಿ ಮೂಲೆಗುಂಪಾಗಿದೆ. ಪ್ರಸ್ತುತ ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಸರ್ಕಾರ ವ್ಯಾಪ್ತಿಗೆ ಬರುವ ಇಲಾಖೆಗಳಲ್ಲಿ ಅನ್ಯ ರಾಜ್ಯದವರೇ ತುಂಬಿಕೊಂಡಿದ್ದಾರೆ. ಕನ್ನಡಿಗರಿಗೆ ಉದ್ಯೋಗ ದೊರಕುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಾ.ಸರೋಜಿನಿ ಮಹಿಷಿ ವರದಿಯಲ್ಲಿನ 14 ಅಂಶಗಳನ್ನು ಜಾರಿಗೊಳಿಸಬೇಕು. ರೈಲ್ವೆ, ಅಂಚೆ, ಮಾಹಿತಿ ತಂತ್ರಜ್ಞಾನ, ಬ್ಯಾಂಕ್ ಹಾಗೂ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಸರ್ಕಾರಿ ಕಚೇರಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದವರಿಗೆ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ವೀರ ಕನ್ನಡಿಗರ ಸೇನೆಯ ಸುಬ್ಬಣ್ಣ ಕರಕನಳ್ಳಿ, ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಶಿಂಧೆ,
ಕರವೇ ಸ್ವಾಭಿಮಾನಿ ಸೇನೆಯ ಅವಿನಾಶ ರಾಯ್, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಪೀಟರ್ ಚಿಟಗುಪ್ಪ, ದಲಿತ ಸಂಘರ್ಷ ಸಮಿತಿಯ ಶಿವಕುಮಾರ ನೀಲಿಕಟ್ಟಿ, ಪ್ರೇಮಕುಮಾರ ಕಾಂಬಳೆ, ರಾಜಕುಮಾರ ಸ್ವಾರಳ್ಳಿಕರ್, ಕರ್ನಾಟಕ ವಿಶ್ವ ನಿರ್ಮಾಣ ಸೇನೆಯ ನೀಹಲ್‌ ಚಟ್ನಳ್ಳಿ, ಕಿಟ್ಟು ಮಾಳಗೆ, ಗುರು ಕಸಬೆ, ಮಾರ್ಟಿನ್, ಲಕ್ಷ್ಮಣ ಕಾಂಬಳೆ, ಕಲ್ಯಾಣರಾವ್ ಗುನ್ನಳ್ಳಿಕರ್, ರಮೇಶ ಪಾಸ್ವಾನ್‌, ಅವಿನಾಶ ದೀನೆ, ಪ್ರದೀಪ ಸಾಗರ, ಗೌರಮ್ಮ, ರೇಷ್ಮಾ ಕೇಸರಿ, ದಯಾನಂದ, ಸಂಜು ದೊಡ್ಡಿ, ದಲಿತ ಸಮರ ಸೇನೆಯ ಗೌತಮ ದೊಡ್ಡಿ, ಸಲೀಂ ಪಾಶಾ, ಪ್ರಭು ಭಾವಿಕಟ್ಟಿ, ಅವಿನಾಶ ಸಿಂದೆ, ಸಂಜು ಮಾಲೇಕರ್, ಲೋಕೇಶ ಸುಣಗಾರ, ನಾಗೇಶ ಮಿತ್ರಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಜಿಲ್ಲೆಯಲ್ಲಿ ಯಾವುದೇ ಸಂಘಟನೆ ಬಂದ್‌ಗೆ ಕರೆ ನೀಡಿರಲಿಲ್ಲ. ಬಸ್ ಹಾಗೂ ಆಟೊ ಸಂಚಾರ ಎಂದಿನಂತೆ ಇತ್ತು. ಮಾರುಕಟ್ಟೆ ವಹಿವಾಟು ಸಹಜವಾಗಿತ್ತು. ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳುು ಎಂದಿನಂತೆ ಕಾರ್ಯ ನಿರ್ವಹಿಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.