ADVERTISEMENT

ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಿ: ಕನಕಟ್ಟೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 7:28 IST
Last Updated 18 ಜನವರಿ 2024, 7:28 IST
ಬೀದರ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಕೆ. ಕನಕಟ್ಟೆ ಉದ್ಘಾಟಿಸಿದರು
ಬೀದರ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಕೆ. ಕನಕಟ್ಟೆ ಉದ್ಘಾಟಿಸಿದರು    

ಬೀದರ್‌: ‘ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆ- 2005 ಹಾಗೂ ನಿಯಮಗಳು 2006 ರ ಕುರಿತು ಅಧಿಕಾರಿಗಳು ಸಮಗ್ರವಾಗಿ ತಿಳಿದುಕೊಂಡು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಕೆ. ಕನಕಟ್ಟೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಹಮ್ಮಿಕೊಂಡಿದ್ದ ಸಹಭಾಗಿದಾರ ಇಲಾಖೆಗಳ ಅಧಿಕಾರಿಗಳ ಜಿಲ್ಲಾಮಟ್ಟದ ಎರಡು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಹಳಷ್ಟು ಮಹಿಳೆಯರು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದಾಗ ಎಲ್ಲಿ ಹೇಗೆ ನ್ಯಾಯ ಪಡೆಯಬೇಕು ಎಂಬುದು ಅವರಿಗೆ ಗೊತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳು ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯ ಬಗ್ಗೆ ತಿಳಿದು, ಅವರಿಗೆ ನ್ಯಾಯ ಕಲ್ಪಿಸಿಕೊಡಬೇಕು ಎಂದರು.

ADVERTISEMENT

ಮಹಿಳೆಯರ ಸಂರಕ್ಷಣೆಗೆ ಅನೇಕ ಕಾಯ್ದೆಗಳಿವೆ. ಕೌಟುಂಬಿಕ ಹಿಂಸೆಗೆ ಒಳಗಾದ ಮಹಿಳೆಯರಿಗೆ ಸುರಕ್ಷತೆ ಖಾತ್ರಿ ಪಡಿಸಲು ಅವಕಾಶ ಇದೆ. ಅದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇದೆ. ಅಲ್ಲಿ ಉಚಿತ ಸಲಹೆ ನೀಡಲಾಗುತ್ತದೆ. ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಲಾಗುತ್ತದೆ. ಅದರ ಪ್ರಯೋಜನ ಪಡೆಯಬೇಕೆಂದು ಹೇಳಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನ aಧಿಕಾರಿ ಡಾ.ಕಿರಣ ಪಾಟೀಲ ಮಾತನಾಡಿ, ಮಹಿಳೆಯರ ಮೇಲೆ ಅನೇಕ ರೀತಿಯಲ್ಲಿ ದೌರ್ಜನ್ಯಗಳಾಗುತ್ತಿವೆ. ಅವರ ರಕ್ಷಣೆಗೆ ಅನೇಕ ಕಾನೂನುಗಳಿವೆ. ಅವುಗಳ ಬಗ್ಗೆ ಮಹಿಳೆಯರು ತಿಳಿದುಕೊಳ್ಳಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ್ ಮಾತನಾಡಿ, ಮನೆಯಲ್ಲಿ ಹೊಡೆಯುವುದು, ಹೆದರಿಸುವುದು ಅಥವಾ ಕಿರುಕುಳ ನೀಡುವುದು ಕೂಡ ಕೌಟುಂಬಿಕ ಹಿಂಸೆ ಎಂದು ಪರಿಗಣಿಸಲಾಗುತ್ತದೆ. ಮಹಿಳೆಯರ ಸಂರಕ್ಷಣೆ ಅಧಿನಿಯಮ 2005 ಮಹಿಳೆಯರಿಗೆ ಸುರಕ್ಷತೆ ಒದಗಿಸುತ್ತದೆ ಎಂದು ಹೇಳಿದರು.

ಲೋಕಾಯುಕ್ತ ಬೀದರ್‌ ವಿಶೇಷ ಸರ್ಕಾರಿ ಅಭಿಯೋಜಕ ಕೇಶವರಾವ ಶ್ರೀಮಾಳೆ, ವಕೀಲರಾದ ಅನಿಲಕುಮಾರ ಕರಂಜಿ, ಹಣಮಂತರಾವ್ ಸಿಂದೋಲ್‌, ಬಸವರಾಜ ಬುಳ್ಳಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ ಕಲ್ಮಲಕರ್, ಪ್ರಕಾಶ ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಗುರುರಾಜ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪರತಾಪೂರ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.