ಬೀದರ್: ತಾಲ್ಲೂಕಿನ ಕೊಳಾರ ಹಾಗೂ ನೌಬಾದ್ ಕೈಗಾರಿಕಾ ಪ್ರದೇಶದಲ್ಲಿ ನಡೆಸಲಾಗುತ್ತಿರುವ ತಂಬಾಕು ಹಾಗೂ ಗುಟ್ಕಾ ತಯಾರಿಕೆ ಘಟಕಗಳ ಮೇಲೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕಿ ಸುರೇಖಾ ಮನೋಳಿ ನೇತೃತ್ವದ ತಂಡ ದಾಳಿ ನಡೆಸಿ ಪರಿಶೀಲಿಸಿತು.
ಅನಧಿಕೃತವಾಗಿ ನಡೆಸಲಾಗುತ್ತಿದ್ದ ಘಟಕ ಮುಚ್ಚಲು ಆದೇಶ ನೀಡಿ ಘಟಕದ ಮಾಲೀಕರಿಗೆ ಪರವಾನಗಿ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಸೂಚನೆ ನೀಡಿತು.
ನೌಬಾದ್ನ ಕೈಗಾರಿಕಾ ಪ್ರದೇಶದಲ್ಲಿರುವ ಆರ್.ಕೆ.ಪ್ರಾಡೆಕ್ಟ್, ಅನುಪಮ ಫೆಬ್ರಿಕೇಷನ್ಸ್, ಕೊಳಾರ ಕೈಗಾರಿಕಾ ಪ್ರದೇಶದಲ್ಲಿರುವ ಫಾರ್ಮರ್ಸ್ ಫುಡ್ ಪ್ರಾಡೆಕ್ಟ್ ವೇರ್ ಹೌಸಿಂಗ್, ರೀಗರ್ ಇಂಡಸ್ಟ್ರಿ, ಎವರಿ ಡೇ ಪ್ರಾಡೆಕ್ಟ್ ಎಚ್.ಎಂ.ಎಸ್ ಎಂಜಿನಿಯರಿಂಗ್ ವರ್ಕ್ಸ್ ಕೇಂದ್ರಗಳಿಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿತು.
ಕೆಲ ಘಟಕಗಳಲ್ಲಿ ಬೇರೆ ರಾಜ್ಯದ ಕಾರ್ಮಿಕರೇ ಅಧಿಕ ಸಂಖ್ಯೆಯಲ್ಲಿರುವುದನ್ನು ಗಮನಿಸಿದ ಅಧಿಕಾರಿಗಳು ಶೇಕಡ 80ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಘಟಕಗಳ ಮಾಲೀಕರಿಗೆ ನಿರ್ದೇಶನ ನೀಡಿದರು.
ಕೆಐಎಡಿಬಿ ಅಭಿವೃದ್ಧಿ ಅಧಿಕಾರಿ ಟಿ.ಎಚ್.ಪ್ರಕಾಶ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಮಂಜಪ್ಪ, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ.ಬಿ.ಶಿವಶಂಕರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಬಾಬು ರೆಡ್ಡಿ, ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್ಐ ಗುರು ಪಾಟೀಲ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ನಾಗರಾಜ, ಜೆಸ್ಕಾಂನ ಸತೀಶ ಹೆಬ್ಬಾಳಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.