ADVERTISEMENT

ಏಡ್ಸ್ ತಡೆಗೆ ಜನ ಜಾಗೃತಿ ಮೂಡಿಸಿ

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2020, 15:52 IST
Last Updated 1 ಡಿಸೆಂಬರ್ 2020, 15:52 IST
ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಬೀದರ್‌ನಲ್ಲಿ ಮಂಗಳವಾರ ನಡೆದ ಜಾಗೃತಿ ಜಾಥಾದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು
ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಬೀದರ್‌ನಲ್ಲಿ ಮಂಗಳವಾರ ನಡೆದ ಜಾಗೃತಿ ಜಾಥಾದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು   

ಬೀದರ್: ಎಚ್‍ಐವಿ/ಏಡ್ಸ್ ತಡೆಗೆ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶಂಕರ ಹೇಳಿದರು.

ವಿಶ್ವ ಏಡ್ಸ್ ದಿನದ ನಿಮಿತ್ತ ಭಾರತೀಯ ಕುಟುಂಬ ಯೋಜನಾ ಸಂಘದ ವತಿಯಿಂದ ನಗರದ ಗುಂಪಾ ರಸ್ತೆಯಲ್ಲಿ ಮಂಗಳವಾರ ಆಯೋಜಿಸಿದ್ದ ಎಚ್‍ಐವಿ/ಏಡ್ಸ್ ಕುರಿತ ಮಾಹಿತಿ, ಶಿಕ್ಷಣ ಹಾಗೂ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಚ್‍ಐವಿ ಸೋಂಕಿತರು ಧನಾತ್ಮಕ ಚಿಂತನೆ ಹಾಗೂ ಪೌಷ್ಟಿಕ ಆಹಾರ ಸೇವನೆ ಮೂಲಕ ಒಳ್ಳೆಯ ಜೀವನ ನಡೆಸಬೇಕು ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ದೀಪಾ ಖಂಡ್ರೆ ಹೇಳಿದರು.

ADVERTISEMENT

ಜಾಗೃತಿ ಕಾರ್ಯಕ್ರಮಗಳ ಪರಿಣಾಮವಾಗಿ ಈಚಿನ ದಿನಗಳಲ್ಲಿ ಏಡ್ಸ್ ಕುರಿತ ತಾರತಮ್ಯ ಕಡಿಮೆ ಯಾಗುತ್ತಿರುವುದು ಕಂಡು ಬರುತ್ತಿದೆ ಎಂದು ಭಾರತೀಯ ಕುಟುಂಬ ಯೋಜನಾ ಸಂಘದ ಸ್ಥಳೀಯ ಶಾಖೆಯ ಅಧ್ಯಕ್ಷೆ ಡಾ. ಆರತಿ ರಘು ನುಡಿದರು.

ಎಚ್‍ಐವಿ, ಏಡ್ಸ್ ಕುರಿತು ಅನಕ್ಷರಸ್ಥರು ಹಾಗೂ ಕೂಲಿ ಕಾರ್ಮಿಕರಲ್ಲಿ ಹೆಚ್ಚು ತಿಳಿವಳಿಕೆ ಮೂಡಿಸುವ ಅಗತ್ಯ ಇದೆ ಎಂದು ಸಂಘದ ಸ್ಥಳೀಯ ಶಾಖಾ ವ್ಯವಸ್ಥಾಪಕ ಶ್ರೀನಿವಾಸ ಬಿರಾದಾರ ಅಭಿಪ್ರಾಯಪಟ್ಟರು.

ಆಪ್ತ ಸಮಾಲೋಚಕ ವಿನಾಯಕ ಕುಲಕರ್ಣಿ ಅವರು ಎಚ್‍ಐವಿ, ಏಡ್ಸ್ ಹಾಗೂ ಕೋವಿಡ್ 19 ಕುರಿತು ಮಾಹಿತಿ ನೀಡಿದರು.
ಸಾರ್ವಜನಿಕರಿಗೆ ಕರ ಪತ್ರ, ಭಿತ್ತಿ ಪತ್ರ, ಕಾಂಡೋಮ್ ಹಾಗೂ ಕೋವಿಡ್ 19 ಪ್ರಯುಕ್ತ ಮಾಸ್ಕ್ ವಿತರಿಸಲಾಯಿತು.

ಜಾಗೃತಿ ಜಾಥಾ

ಬೀದರ್‌: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ಜಾಗೃತಿ ಜಾಥಾ ನಡೆಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಜಾಥಾಕ್ಕೆ ಚಾಲನೆ ನೀಡಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ದೀಪಾ ಖಂಡ್ರೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವಶಂಕರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಅಧಿಕಾರಿ ಡಾ. ಅನಿಲ ಚಿಂತಾಮಣಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರತಿಕಾಂತ ಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ, ಆರ್.ಸಿ.ಎಚ್. ಅಧಿ ಕಾರಿ ಡಾ.ರವೀಂದ್ರ ಸಿರಸಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.