ADVERTISEMENT

‘ಉತ್ತಮ ಬದುಕಿಗೆ ಸಾಹಿತ್ಯದ ಓದು ಅಗತ್ಯ’

ಕಲ್ಯಾಣ ಕರ್ನಾಟಕದ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಚಿಂತನ-ಮಂಥನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 13:19 IST
Last Updated 28 ನವೆಂಬರ್ 2022, 13:19 IST
ಬೀದರ್‌ನಲ್ಲಿ ನಡೆದ ಕಲ್ಯಾಣ ಕರ್ನಾಟಕದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಿಂತನ-ಮಂಥನ ಕಾರ್ಯಕ್ರಮವನ್ನು ಡಾ.ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಜಂಟಿಯಾಗಿ ಉದ್ಘಾಟಿಸಿದರು
ಬೀದರ್‌ನಲ್ಲಿ ನಡೆದ ಕಲ್ಯಾಣ ಕರ್ನಾಟಕದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಿಂತನ-ಮಂಥನ ಕಾರ್ಯಕ್ರಮವನ್ನು ಡಾ.ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಜಂಟಿಯಾಗಿ ಉದ್ಘಾಟಿಸಿದರು   

ಬೀದರ್‌: ‘ಉತ್ತಮ ಬದುಕು ಕಟ್ಟಿಕೊಳ್ಳಲು ಸಾಹಿತ್ಯದ ಓದು ಅಗತ್ಯ. ತತ್ವಶಾಸ್ತ್ರ, ಧರ್ಮಶಾಸ್ತ್ರ ಹಾಗೂ ರಾಜ್ಯಶಾಸ್ತ್ರದ ಅಧ್ಯಯನದಿಂದಲೂ ಜ್ಞಾನ ವೃದ್ಧಿಯಾಗುತ್ತದೆ’ ಎಂದು ಸಾಹಿತಿ ಪಾರ್ವತಿ ಸೋನಾರೆ ಅಭಿಪ್ರಾಯಪಟ್ಟರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ನಡೆದ ಕಲ್ಯಾಣ ಕರ್ನಾಟಕದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಚಿಂತನ-ಮಂಥನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಕಥೆ, ಕಾದಂಬರಿ, ಕವನ ರಚಿಸಬೇಕು. ಪಠ್ಯದ ಜತೆಗೆ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಹಕಾರ ರತ್ನ ಪ್ರಶಸ್ತಿ ಪುರಷ್ಕೃತ ಸೂರ್ಯಕಾಂತ ನಾಗಮಾರಪಳ್ಳಿ ಸನ್ಮಾನ ಸ್ವೀಕರಿಸಿ ಮಾತನಾಡಿ,‘2023ರ ಜನವರಿ 7,8 ಮತ್ತು 9 ರಂದು ಕೋಟೆಯಲ್ಲಿ ನಡೆಯಲಿರುವ ಬೀದರ್ ಉತ್ಸವದಲ್ಲಿ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಜಿಲ್ಲೆಯ ನಿರುದ್ಯೋಗಿ ಯುವಕರು ಇದರ ಸದುಪಯೋಗ ಪಡೆಯಬೇಕು’ ಎಂದು ಹೇಳಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಶಾಸಕ ರಹೀಂ ಖಾನ್ ಮಾತನಾಡಿ,‘ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ಕೊಡಬೇಕು. ಹೊಸ ತಂತ್ರಜ್ಞಾನವನ್ನು ಜ್ಞಾನ ವೃದ್ಧಿಗೆ ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಕಾಂತ ಶಾಹಾಬಾದಕರ್, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಕಾರ್ಯದರ್ಶಿ ಪ್ರಕಾಶ ಅಂಗಡಿ ಮಾತನಾಡಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಎಸ್.ಬಲಬೀರಸಿಂಗ್ ಪರವಾಗಿ ಅವರ ಪುತ್ರ ಪುನೀತಸಿಂಗ್, ಕೊಪ್ಪಳದ ಶಂಕ್ರೆಪ್ಪ ಮಲ್ಲಪ್ಪ ಹೊರಪೇಟೆ, ಸಹಕಾರ ರತ್ನ ಪ್ರಶಸ್ತಿ ಪುರಷ್ಕೃತ ಸೂರ್ಯಕಾಂತ ನಾಗಮಾರಪಳ್ಳಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಮಕ್ಕಳ ಕಲ್ಯಾಣ ರಾಜ್ಯ ಪ್ರಶಸ್ತಿ ಪುರಷ್ಕೃತ ಹೊಸಪೇಟೆಯ ಗುಂಡಿ ರಮೇಶ ಅವರನ್ನು ಸನ್ಮಾನಿಸಲಾಯಿತು.

ಶಿವಾನಿ ಸ್ವಾಮಿ, ಶಿವದಾಸ ಸ್ವಾಮಿ ಕನ್ನಡ ಗೀತೆ, ಕೊಪ್ಪಳ ಜಿಲ್ಲೆಯ ದಾವೂದ್‌ಸಾಬ ಅತ್ತಾರ ಹಾಗೂ ಸಂಗಡಿಗರು ಗೀಗಿ ಪದ ಹಾಡಿದರು. ನೃತ್ಯಾಂಗನ ನಾಟ್ಯ ಮತ್ತು ಕಲಾ ಕೇಂದ್ರದ ಪೂರ್ಣಚಂದ್ರ ಮೈನಾಳೆ ಹಾಗೂ ತಂಡದವರು ನೃತ್ಯ ಪ್ರದರ್ಶಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಜಿ.ರಮೇಶ, ಜಿಲ್ಲಾ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಮನ್ಮಥ ಢೋಳೆ, ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ಸೋನಾರೆ, ವಿದ್ಯಾರ್ಥಿ ಮುಖಂಡ ಅರುಣ ಕೊಡುಗೆ, ಒಕ್ಕೂಟದ ಸಹ ಕಾರ್ಯದರ್ಶಿ ರೇಖಾ ಸೌದಿ, ಕರ್ನಾಟಕ ಯುವ ಸಂಘ-ಸಂಸ್ಥೆಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಶಿವಕುಮಾರ ಎಚ್., ರಾಮನಗರದ ಆನಂದ, ಕೋಲಾರ ಬಿ. ಶೇಖರಪ್ಪ ಕೆ.ಜಿ.ಎಫ್, ಕರ್ನಾಟಕ ಯುವ ಸಂಘ-ಸಂಸ್ಥೆಗಳ ಒಕ್ಕೂಟದ ಕಾರ್ಯದರ್ಶಿ ಪಣೀಂದ್ರ ಪ್ರಸಾದ.ಬಿ ಇದ್ದರು.

ಮಧ್ಯಾಹ್ನ ನಡೆದ ಸಮಾರೋಪ ಸಮಾರಂಭದಲ್ಲಿ ಸಾಹಿತಿ ರಮೇಶ ಬಿರಾದಾರ ಸಮಾರೋಪ ಭಾಷಣ ಮಾಡಿದರು.

ಕಲಾವಿದ ಶರಣಪ್ಪ ವಡಗೇರಿ ಹಾಗೂ ತಂಡದವರು ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

ಸುರೇಶ ಕಟ್ಟಿಮನಿ ಭಾಲ್ಕಿ ಹಾಗೂ ತಂಡದವರು ‘ಸೊಕ್ಕಿನ ಸೊಸೆ’ ನಾಟಕ ಪ್ರದರ್ಶಿಸಿದರು.

ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಸಂಸ್ಥೆಯ ಪ್ರಾಂಶುಪಾಲರು, ಸಿಬ್ಬಂದಿ ಪಾಲ್ಗೊಂಡಿದ್ದರು.

ಸುನೀಲ ಕಡ್ಡೆ ನಿರೂಪಿಸಿದರು. ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಸಹಕಾರ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.