ADVERTISEMENT

ಶಿಕ್ಷಕರ ತರಬೇತಿ ಶಿಬಿರಕ್ಕೆ ಚಾಲನೆ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 14:49 IST
Last Updated 14 ನವೆಂಬರ್ 2022, 14:49 IST
ಬೀದರ್‌ನ ಡಯಟ್‍ನಲ್ಲಿ ಆರಂಭವಾದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಉದ್ಘಾಟಿಸಿದರು
ಬೀದರ್‌ನ ಡಯಟ್‍ನಲ್ಲಿ ಆರಂಭವಾದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಉದ್ಘಾಟಿಸಿದರು   

ಬೀದರ್‌: ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಶಿಕ್ಷಕರು ಸಜ್ಜಾಗಬೇಕು’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.

ನಗರದ ನೌಬಾದ್‍ನ ಡಯಟ್‍ನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಶಿಕ್ಷಣ ನೀತಿ–2020 ಹಾಗೂ 21ನೇ ಶತಮಾನದ ಬೋಧನಾ ಕೌಶಲ ಕುರಿತ 12 ದಿನಗಳ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಮಕ್ಕಳ ಸರ್ವಾಂಗೀಣ ವಿಕಾಸ ಗಮನದಲ್ಲಿ ಇಟ್ಟುಕೊಂಡು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಕರು ಅದನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು. ಮಕ್ಕಳನ್ನು 21ನೇ ಶತಮಾನದ ಸ್ಪರ್ಧೆ ಎದುರಿಸಲು ತಯಾರುಗೊಳಿಸಬೇಕು’ ಎಂದು ಹೇಳಿದರು.

ADVERTISEMENT

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಮಾತನಾಡಿ,‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಸಮಗ್ರ ಮಾಹಿತಿ ನೀಡಲು ಕಲ್ಯಾಣ ಕರ್ನಾಟಕದ ಏಳೂ ಜಿಲ್ಲೆಗಳಲ್ಲಿ ಸಂಘದ ವತಿಯಿಂದ ಶಿಕ್ಷಕರಿಗೆ ಮೂರನೇ ಹಂತದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಡಯಟ್ ಉಪ ಪ್ರಾಚಾರ್ಯ ಡಾ. ಮಹಮ್ಮದ್ ಗುಲ್ಶನ್ ಮಾತನಾಡಿದರು.

ಆ್ಯಕ್ಟ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಾದ ಸಂದೀಪ್, ರವೀಂದ್ರ, ಡಯಟ್ ಉಪನ್ಯಾಸಕರಾದ ಶಿವಶಂಕರ ಸ್ವಾಮಿ, ಧನರಾಜ ಗುಡಮೆ ಇದ್ದರು.

ಉಪನ್ಯಾಸಕ ಗೋವಿಂದ ರೆಡ್ಡಿ ಸ್ವಾಗತಿಸಿದರು. ಗಣಪತಿ ಹಡಪದ ನಿರೂಪಿಸಿದರು. ಡಯಟ್ ನೋಡಲ್ ಅಧಿಕಾರಿ ಸಂತೋಷ ಪೂಜಾರಿ ವಂದಿಸಿದರು.

150 ಶಾಲೆಗಳ 150 ಶಿಕ್ಷಕರು ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘ, ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್ ಟ್ರಸ್ಟ್, ಡಯಟ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.