ಬೀದರ್: ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಒದಗಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾದ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಪ್ರಧಾನಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.
ಹಿಂಗಾರು ಬೆಳೆ ಸಾಲ ಮನ್ನಾ ಮಾಡಬೇಕು. ಮುಂಗಾರಿಗೆ ಬಡ್ಡಿ ರಹಿತ ಬೆಳೆ ಸಾಲ ಕೊಡಬೇಕು. ಟ್ರ್ಯಾಕ್ಟರ್ ಸಾಲ ಮನ್ನಾ ಮಾಡಬೇಕು. ಸ್ವಸಹಾಯ ಗುಂಪುಗಳ ಸಾಲದ ಬಡ್ಡಿ ಮನ್ನಾ ಮಾಡಬೇಕು. ಸಹಕಾರ ಸಂಘಗಳಿಗೆ ಹಾಲು ಪೂರೈಸುವವರಿಗೆ ಮಾಸಿಕ ರೂ. 1 ಸಾವಿರ ಸಹಾಯಧನ ಕಲ್ಪಿಸಬೇಕು. ಎರಡು ಎಮ್ಮೆ ಅಥವಾ ಆಕಳು ಕೊಡಬೇಕು. 60 ವರ್ಷ ಮೇಲ್ಪಟ್ಟವರಿಗೆ ಮಾಸಿಕ ರೂ. 7,500 ಗೌರವ ಧನ ನೀಡಬೇಕು. ಡೀಸೆಲ್ ಬೆಲೆ ಶೇ 50 ರಷ್ಟು ಕಡಿಮೆ ಮಾಡಬೇಕು. ವಿದ್ಯುತ್ ಮಸೂದೆ (ತಿದ್ದುಪಡಿ) 2020 ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕೃಷಿ ಉತ್ಪನ್ನ ವಾಣಿಜ್ಯ ಮತ್ತು ಮಾರಾಟ (ಉತ್ತೇಜನ ಹಾಗೂ ಬೆಂಬಲ)ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳು ಕುರಿತ ಒಪ್ಪಂದ ಕಾಯ್ದೆ ಹಾಗೂ ಅಗತ್ಯ ವಸ್ತುಗಳ ಕಾಯ್ದೆ (ತಿದ್ದುಪಡಿ) 2020 ರೈತ ವಿರೋಧಿಯಾಗಿವೆ ಎಂದು ಆಪಾದಿಸಿದರು.
ಸಭಾದ ರಾಜ್ಯ ಉಪಾಧ್ಯಕ್ಷ ಬಾಬುರಾವ್ ಹೊನ್ನಾ, ಜಿಲ್ಲಾ ಘಟಕದ ಅಧ್ಯಕ್ಷ ನಜೀರ್ ಅಹಮ್ಮದ್, ಖಾಜಾ ಮೈನೊದ್ದೀನ್, ಖಾದರ್ ಶಾ, ಮಾಣಿಕ ಖಾನಾಪೂರಕರ್, ಎಂ.ಡಿ. ಷಫಾಯತ್ ಅಲಿ, ಖಮರ್ ಪಟೇಲ್, ಶಿವರಾಜ ಕಟಗಿ, ಪ್ರಭು ತಗಣಿಕರ್ ಮೊದಲಾದವರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.