ಬೀದರ್: ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಎಂದು ಘೋಷಿಸಿ, ಮಳೆಯಿಂದ ಬೆಳೆ ಹಾನಿಗೀಡಾದ ರೈತರಿಗೆ ಎಕರೆಗೆ ರೂ. 10 ಸಾವಿರ ಪರಿಹಾರ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.
ಸಂಘದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಮನವಿ ಪತ್ರವನ್ನು ಉಪ ವಿಭಾಗಧಿಕಾರಿ ಗರಿಮಾ ಪನ್ವಾರ್ ಅವರಿಗೆ ಸಲ್ಲಿಸಿದರು.
ಜಿಲ್ಲೆಯಲ್ಲಿ ಸುರಿದ ಸತತ ಮಳೆಗೆ ರೈತರು ತೊಂದರೆಗೆ ಒಳಗಾಗಿದ್ದಾರೆ ಎಂದು ಹೇಳಿದರು.
ಬೆಳೆ ವಿಮೆ ಪಾವತಿಸಿದ ರೈತರಿಗೆ ಪರಿಹಾರ ಕಲ್ಪಿಸಬೇಕು. ಬೆಂಬಲ ಬೆಲೆಯಲ್ಲಿ ಪ್ರತಿ ರೈತರಿಂದ 20 ಕ್ವಿಂಟಲ್ ಉದ್ದು, ಹೆಸರು ಖರೀದಿಸಬೇಕು. ಸಕ್ಕರೆ ಕಾರ್ಖಾನೆಗಳ ರೈತರ ಕಬ್ಬು ಬಾಕಿ ಹಣ ಕೊಡಿಸಬೇಕು. ಮುಂಗಾರು ಹಂಗಾಮಿಗೆ ಶೇ 75 ರಷ್ಟು ರಿಯಾಯಿತಿ ದರದಲ್ಲಿ ಕಡಲೆ ಬೀಜ ವಿತರಿಸಬೇಕು. ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೊಳಗಾದ ರೈತರಿಗೆ ವೈಜ್ಞಾನಿಕ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಮುಖಂಡರಾದ ಪ್ರಕಾಶ ಅಲ್ಮಾಜೆ, ನಾಗಶೆಟ್ಟೆಪ್ಪ ಲಂಜವಾಡೆ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.