ಬೀದರ್: ಮೂರು ರೈತ ವಿರೋಧಿ ಕೃಷಿ ಕಾಯ್ದೆ ಹಾಗೂ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಅಖಿಲ ಭಾರತ ಕಿಸಾನ್ ಸಭಾ ಹಾಗೂ ಅಖಿಲ ಭಾರತ ಟ್ರೇಡ್ ಯುನಿಯನ್ ಕಾಂಗ್ರೆಸ್ (ಎಐಟಿಯುಸಿ) ಒತ್ತಾಯಿಸಿವೆ.
ಎರಡೂ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಪ್ರಧಾನಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರೈತರು ನಾಲ್ಕು ತಿಂಗಳಿಂದ ಚಳವಳಿ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ರೈತರ ಬೇಡಿಕೆಗಳನ್ನು ಮನ್ನಿಸುತ್ತಿಲ್ಲ. ಸರ್ಕಾರದ ಬೆಂಬಲಿಗರು ಅಪಮಾನಕರ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.
29 ಕಾರ್ಮಿಕರ ಕಾಯ್ದೆಗಳನ್ನು ರದ್ದುಪಡಿಸಿ, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿ, ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಕಾರ್ಖಾನೆಗಳಿಗೆ ಕಬ್ಬು ಪೂರೈಸಿದವರಿಗೆ 15 ದಿನಗಳ ಒಳಗೆ ಹಣ ಪಾವತಿಸುತ್ತಿಲ್ಲ ಎಂದು ದೂರಿದರು.
ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ಕನಿಷ್ಠ ಬೆಂಬಲ ಬೆಲೆ ಕಾಯ್ದೆ ರೂಪಿಸಬೇಕು. ವಿದ್ಯುತ್ ವಿತರಣೆ ಖಾಸಗೀಕರಣ ಮಸೂದೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಅಖಿಲ ಭಾರತ ಕಿಸಾನ್ ಸಭಾ ರಾಜ್ಯ ಘಟಕದ ಉಪಾಧ್ಯಕ್ಷ ಬಾಬುರಾವ್ ಹೊನ್ನಾ, ಜಿಲ್ಲಾ ಘಟಕದ ಅಧ್ಯಕ್ಷ ನಜೀರ್ ಅಹಮ್ಮದ್, ಅಖಿಲ ಭಾರತ ಜಂಜೀಮೆ ಇನ್ಸಾಫ್ ಜಿಲ್ಲಾ ಘಟಕದ ಅಧ್ಯಕ್ಷ ಅಲಿ ಅಹಮ್ಮದ್ ಖಾನ್, ಖಮರ್ ಪಟೇಲ್, ರಾಮಯ್ಯ ಮಠಪತಿ, ಶಿವರಾಜಿರಾವ್ ಪಾಟೀಲ ವಾಗ್ಲೆ, ಶೇಖ ನವಾಜ್, ಗುರುಪಾದಯ್ಯ ಸ್ವಾಮಿ, ಚಂದ್ರಭಾನ, ಪ್ರಭು ತಗಣಿಕರ್, ಎಂ.ಡಿ. ಷಫಾಯತ್ ಅಲಿ, ಖಾದರ್ ಸಾಬ್, ಬಸವರಾಜ ಪಾಟೀಲ, ನನ್ನೆ ಸಾಬ್ ಮೊದಲಾದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.