ADVERTISEMENT

ಚಾಂಬೋಳ್‍ನಲ್ಲಿ ಕಂದಾಯ ಸಚಿವರ ಕಾರ್ಯಕ್ರಮ ನಾಳೆ

ಕಾಲ್ ಮಾಡಿದರೆ 72 ಗಂಟೆಗಳಲ್ಲೇ ಮಾಸಾಶನ ಆದೇಶ

​ಪ್ರಜಾವಾಣಿ ವಾರ್ತೆ
Published 26 ಮೇ 2022, 15:28 IST
Last Updated 26 ಮೇ 2022, 15:28 IST

ಬೀದರ್: ಫೋನ್‍ನಲ್ಲಿ ಹಲೋ ಕಂದಾಯ ಸಚಿವರೆ ಎಂದು ಹೇಳಿ, ಅಗತ್ಯ ದಾಖಲೆ ಒದಗಿಸಿದರೆ 72 ಗಂಟೆಗಳಲ್ಲೇ ಮಾಸಾಶನ ಮಂಜೂರಾತಿ ಪತ್ರ ನೀಡುವ ವಿನೂತನ ಕಾರ್ಯಕ್ರಮ ತಾಲ್ಲೂಕಿನ ಚಾಂಬೋಳ್‍ನಲ್ಲಿ ಶನಿವಾರ (ಏ.28) ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದ್ದಾರೆ.


ಕಂದಾಯ ಸಚಿವ ಆರ್. ಅಶೋಕ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಲಿದ್ದಾರೆ ಎಂದು ಹೇಳಿದ್ದಾರೆ.


ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಸಾಮಾಜಿಕ ಭದ್ರತಾ ಯೋಜನೆಗಳ ಅಡಿಯಲ್ಲಿ ಅರ್ಹರಿಗೆ ಅರ್ಜಿ ಸಲ್ಲಿಸಲು ನೆರವಾಗಿದೆ. ಓದು, ಬರಹ ಬಾರದವರ ಅರ್ಜಿ ಹಾಗೂ ಇತರ ದಾಖಲೆಗಳನ್ನು ಆನ್‍ಲೈನ್‍ನಲ್ಲಿ ಸಲ್ಲಿಸಲು ಸಹಾಯ ಮಾಡಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸವನ್ನೂ ಮಾಡಿದೆ ಎಂದು ತಿಳಿಸಿದ್ದಾರೆ.

ADVERTISEMENT


ಕಾರ್ಯಕ್ರಮದಲ್ಲಿ ತಾಲ್ಲೂಕಿನ ಫಲಾನುಭವಿಗಳಿಗೆ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಅಂಗವಿಕಲ, ಮನಸ್ವಿನಿ, ವಿಧವಾ ವೇತನ, ಮೈತ್ರಿ ಯೋಜನೆ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಗೆ ಮಾಸಾಶನ ಪ್ರಮಾಣ ಪತ್ರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.


ಆರ್. ಅಶೋಕ ಅವರು ಸಚಿವರಾದ ನಂತರ ಕಂದಾಯ ಇಲಾಖೆ ಸೇವೆಯನ್ನು ಜನರ ಹಾಗೂ ರೈತರ ಮನೆಬಾಗಿಲಿಗೆ ತಲುಪಿಸುವ ಮೂಲಕ ರಾಜ್ಯದಲ್ಲಿ ಹೊಸ ಕ್ರಾಂತಿಯನ್ನೇ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಸಚಿವರು ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಪರಿಣಾಮವಾಗಿ ಜನ ಜಿಲ್ಲಾಧಿಕಾರಿ, ತಹಶೀಲ್ದಾರ್ ಕಚೇರಿಗೆ ಅಲೆದಾಡುವುದು ತಪ್ಪಿದೆ. ಅಗತ್ಯ ದಾಖಲೆಗಳು, ಅರ್ಹರಿಗೆ ಸರ್ಕಾರದ ಸೌಲಭ್ಯಗಳು ಶೀಘ್ರ ದೊರಕುತ್ತಿವೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.