ಬೀದರ್: ಔರಾದ್ ತಾಲ್ಲೂಕಿನ ತೋರಣಾ ಗ್ರಾಮದಿಂದ ಚಾಂದೂರಿ ವರೆಗಿನ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ನಿರ್ವಹಣಾ ಕಾಮಗಾರಿಯನ್ನು ಕಳಪೆ ಗುಣಮಟ್ಟದಿಂದ ಕೈಗೊಳ್ಳಲಾಗಿದೆ ಎಂದು ಚಾಂದೂರಿ ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಾಟೀಲ ಚಾಂದೂರಿ ಆರೋಪಿಸಿದ್ದಾರೆ.
ಈ ಕುರಿತು ಅವರು ಬೀದರ್ನ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರಿಗೆ ದೂರು ಸಲ್ಲಿಸಿದ್ದಾರೆ.
ತೋರಣಾ-ಚಾಂದೂರಿ ರಸ್ತೆ ಕಾಮಗಾರಿ 2017 ರ ಮಾರ್ಚ್ನಲ್ಲಿ ಪೂರ್ಣಗೊಂಡಿದ್ದು, ಸಂಬಂಧಪಟ್ಟ ಗುತ್ತಿಗೆದಾರರೇ 2022 ರ ಮಾರ್ಚ್ 31 ರ ವರೆಗೆ ಅದರ ನಿರ್ವಹಣೆ ಮಾಡಬೇಕಿತ್ತು. ಆದರೆ, ಗುತ್ತಿಗೆದಾರ ಕೇವಲ ಎರಡೇ ದಿನಗಳಲ್ಲಿ ಐದು ಕಿ.ಮೀ. ನಿರ್ವಹಣಾ ಕಾಮಗಾರಿ ಕೈಗೊಂಡಿದ್ದಾರೆ. ಕಾಮಗಾರಿ ಕಳಪೆ ಆಗಿರುವುದು ಮೇಲ್ನೊಟಕ್ಕೆ ಸಾಬೀತಾಗಿದೆ ಎಂದು ಆರೋಪಿಸಿದ್ದಾರೆ.
ನಿರ್ವಹಣಾ ಕಾಮಗಾರಿ ನಡೆಯುತ್ತಿದ್ದ ವೇಳೆ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ಇಲ್ಲವೇ ಮೇಲುಸ್ತುವಾರಿ ಮಾಡಿಲ್ಲ. ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ಅಧಿಕಾರಿಗಳು ಸೇರಿಕೊಂಡು ಕಳಪೆ ಕಾಮಗಾರಿ ಕೈಗೊಂಡಿರುವುದು ಕಂಡು ಬಂದಿದೆ ಎಂದು ಆಪಾದಿಸಿದ್ದಾರೆ.
ಕೂಡಲೇ ನಿರ್ವಹಣಾ ಕಾಮಗಾರಿಯ ಪರಿಶೀಲನೆ ನಡೆಸಬೇಕು. ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೈಗೊಳ್ಳಲಾಗಿದೆಯೇ ಎನ್ನುವುದನ್ನು ಖಾತರಿಪಡಿಸಿಕೊಂಡ ನಂತರವೇ ಬಿಲ್ ಪಾವತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.