ಬೀದರ್: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಆರ್ಎಸ್ಎಸ್ ವಿರುದ್ಧ ಘೋಷಣೆಗಳನ್ನು ಹಾಕಿದರು. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪರ ಘೋಷಣೆಗಳನ್ನು ಕೂಗಿದರು.
ಇತ್ತೀಚಿನ ವರ್ಷಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ಸಮಾಜದಲ್ಲಿ ಭಯದ ವಾತಾವರಣ ಮೂಡಿಸುತ್ತಿವೆ. ಅದಕ್ಕೆ ತಕ್ಷಣವೇ ಕಡಿವಾಣ ಹಾಕಬೇಕು. ಈ ಹಿಂದೆ ದೇಶದಲ್ಲಿ ಅಂದಿನ ಗೃಹಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್, ಪಿ.ವಿ. ನರಸಿಂಹರಾವ್ ಅವರು ಪ್ರಧಾನಿ ಇದ್ದಾಗ ಆರ್ಎಸ್ಎಸ್ ಮೇಲೆ ನಿಷೇಧ ಹೇರಿದ್ದರು. ಅದೇ ರೀತಿ ಪುನಃ ನಿಷೇಧ ಹೇರುವ ಸಂದರ್ಭ ಈಗ ಬಂದಿದೆ ಎಂದು ಹೇಳಿದರು.
ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ನಿಷೇಧಿಸಬೇಕೆಂದು ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ಸೂಕ್ತವಾಗಿದೆ. ಅದನ್ನು ಆಧರಿಸಿ ಸಿಎಂ ತಕ್ಷಣವೇ ಕ್ರಮ ಜರುಗಿಸಬೇಕು. ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು. ಅವರಿಗೆ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಮಹಾನಗರ ಪಾಲಿಕೆ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಜಾರ್ಜ್, ಮುಖಂಡರಾದ ಅರವಿಂದಕುಮಾರ ಅರಳಿ, ಅಬ್ದುಲ್ ಮನ್ನಾನ್ ಸೇಠ್, ಬಚ್ಚನ್, ಓಂಪ್ರಕಾಶ ರೊಟ್ಟೆ, ಜಗದೀಶ್ವರ ಮತ್ತಿತರರು ಪಾಲ್ಗೊಂಡಿದ್ದರು.