ಬೀದರ್: ‘ಸಹಕಾರ ಕಾಯ್ದೆಯಲ್ಲಿ ಇತ್ತೀಚೆಗೆ ಬದಲಾವಣೆಗಳಾಗಿದ್ದು, ಅದರ ಬಗ್ಗೆ ಸಹಕಾರಿ ಸಂಘಗಳು ತಿಳಿದುಕೊಳ್ಳುವುದು ಬಹಳ ಅಗತ್ಯ’ ಎಂದು ಸಹಕಾರ ಸಂಘಗಳ ಉಪನಿಬಂಧಕಿ ಮಂಜುಳಾ ಎಸ್. ತಿಳಿಸಿದರು.
ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೀದರ್ ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಾರ್ದ ಡಿ.ಸಿ.ಸಿ ಬ್ಯಾಂಕ್ ಸಹಯೋಗದಲ್ಲಿ ನಗರದ ನೌಬಾದ್ ತರಬೇತಿ ಕೇಂದ್ರದಲ್ಲಿ ಗುರುವಾರ ಸಹಕಾರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಏರ್ಪಡಿಸಿದ್ದ ಒಂದು ದಿನದ ಜಿಲ್ಲಾಮಟ್ಟದ ವಿಶೇಷ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
‘ಸಾಲ ವಸೂಲಾತಿ ಸಹಕಾರ ಸಂಘಗಳ ದೈನಂದಿನ ಕೆಲಸವಾಗಿದೆ. ಆದರೆ, ಸಹಕಾರ ಕಾಯ್ದೆಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಬಹಳ ಅಗತ್ಯ. ಪ್ರತಿಯೊಂದು ಸಂಘದಲ್ಲಿ ಚುನಾವಣೆ ನಡೆಸಬೇಕಿದೆ. ಚುನಾವಣೆ ಪಾರದರ್ಶಕವಾಗಿ ನಡೆಸಬೇಕು. ತರಬೇತಿಯ ಅವಧಿಯಲ್ಲಿ ತಿಳಿದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಬೇಕು. ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿ ಸಹಕಾರ ಕ್ಷೇತ್ರದಲ್ಲಿ ಬೀದರ್ ಜಿಲ್ಲೆಗೆ ಹೆಸರು ತಂದುಕೊಡಬೇಕು’ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪರಮೇಶ್ವರ ಮುಗಟೆ, ‘ಸಹಕಾರ ಕ್ಷೇತ್ರದ ಆಳ ಅಗಲದ ಬಗ್ಗೆ ಸಹಕಾರ ಕ್ಷೇತ್ರದ ಪ್ರತಿಯೊಬ್ಬರಿಗೂ ತಿಳಿದಿರಬೇಕು. ತರಬೇತಿ ಪಡೆದುಕೊಂಡ ನಂತರ ಅದನ್ನು ಅನುಷ್ಠಾನಕ್ಕೆ ತರಬೇಕು’ ಎಂದು ತಿಳಿಸಿದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಗುಂಡಪ್ಪ ಹಣಮಂತಪ್ಪಾ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಪವನ್ ರಾಠೋಡ್, ನಿವೃತ್ತ ಸಹಕಾರ ಸಂಘಗಳ ನಿಬಂಧಕ ಲಿಯಾಕತ್ ಅಲಿ, ಲೆಕ್ಕಪರಿಶೋಧನಾ ಇಲಾಖೆಯ ಜಗದೇವಿ, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಆರ್. ಮಲ್ಲಮ್ಮ, ಜಿಲ್ಲಾ ಸಹಕಾರ ಶಿಕ್ಷಕ ಮಾರುತಿ ಕೆ. ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.