ADVERTISEMENT

ಬೀದರ್: ಕಪ್ಪುಪಟ್ಟಿ ಧರಿಸಿ ಶುಶ್ರೂಷಾಧಿಕಾರಿಗಳ ಪ್ರತಿಭಟನೆ

ಮೂಲ ವೇತನದಲ್ಲಿ ಶೇ 50 ರಷ್ಟು ಹೆಚ್ಚಳಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 17:48 IST
Last Updated 17 ಆಗಸ್ಟ್ 2020, 17:48 IST
ಮೂಲ ವೇತನದಲ್ಲಿ ಶೇ 50ರಷ್ಟು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಬ್ರಿಮ್ಸ್ ಶುಶ್ರೂಷಕ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸೋಮವಾರ ಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು
ಮೂಲ ವೇತನದಲ್ಲಿ ಶೇ 50ರಷ್ಟು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಬ್ರಿಮ್ಸ್ ಶುಶ್ರೂಷಕ ನೌಕರರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸೋಮವಾರ ಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು   

ಬೀದರ್: ಮೂಲ ವೇತನದಲ್ಲಿ ಶೇ 50 ರಷ್ಟು ಹೆಚ್ಚಳ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಲ್ಲಿಯ ಬ್ರಿಮ್ಸ್ ಆಸ್ಪತ್ರೆಯ ಶುಶ್ರೂಷಾಧಿಕಾರಿಗಳು ಸೋಮವಾರ ಕೈಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಮುಷ್ಕರ ಆರಂಭಿಸಿದರು.

ಬ್ರಿಮ್ಸ್ ಶುಶ್ರೂಷಕ ನೌಕರರ ಸಂಘದ ನೇತೃತ್ವದಲ್ಲಿ ಬ್ರಿಮ್ಸ್ ಆಸ್ಪತ್ರೆ ಮುಂಭಾಗದಲ್ಲಿ ಸೇರಿ ಘೋಷಣೆ ಕೂಗಿದರು. ಫಲಕಗಳನ್ನು ಪ್ರದರ್ಶಿಸಿದರು.

ಕೋವಿಡ್ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ ಎಐಸಿಟಿಇ ವೇತನ ಹಾಗೂ ಗ್ರೂಪ್ ಡಿ ಸಿಬ್ಬಂದಿಗೆ ₹10 ಸಾವಿರ ಪ್ರೋತ್ಸಾಹ ಧನ ನೀಡಿರುವುದು ಸ್ವಾಗತಾರ್ಹ. ಆದರೆ, ಶುಶ್ರೂಷಾಧಿಕಾರಿಗಳಿಗೆ ಯಾವುದೇ ಪ್ರೋತ್ಸಾಹ ಧನ ನೀಡದೆ ತಾರತಮ್ಯ ನೀತಿ ಅನುಸರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ದೂರಿದ್ದಾರೆ.

ADVERTISEMENT

ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯ ಸ್ವಾಯತ್ತ ಸಂಸ್ಥೆಗಳಾದ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ನೆಪ್ರೊ ಯುರಾಲಾಜಿ ಸಂಸ್ಥೆ ಸಿಬ್ಬಂದಿಗೆ ನೂತನ ಪಿಂಚಣಿ ಯೋಜನೆ (ಎನ್‍ಪಿಎಸ್) ಸೌಲಭ್ಯ ಇದೆ. ಶುಶ್ರೂಷಾಧಿಕಾರಿಗಳಿಗೆ ಮಾತ್ರ ಯಾವುದೇ ಪಿಂಚಣಿ ಇಲ್ಲ. ಶುಶ್ರೂಷಾಧಿಕಾರಿಗಳಿಗೂ ನೂತನ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಒಂದೇ ಮಾದರಿಯ ಆರೋಗ್ಯ ಸೇವೆಗಳು ಲಭ್ಯ ಇವೆ. ಆದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗೆ ಮಾತ್ರ ಕೆಜಿಐಡಿ ಹಾಗೂ ಇತರ ಸೌಲಭ್ಯಗಳು ಇವೆ ಎಂದು ಬೇಸರ ವ್ಯಕ್ತಪಡಿಸಿದರು.

ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಂಡಿರುವ ವೈದ್ಯಕೀಯ ಶಿಕ್ಷಣ ಇಲಾಖೆಯ ಶುಶ್ರೂಷಾಧಿಕಾರಿಗಳಿಗೆ ಯಾವುದೇ ನಗದು ರಹಿತ ಚಿಕಿತ್ಸಾ ಸೌಲಭ್ಯಗಳು ಇಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗೆ ಇರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಶುಶ್ರೂಷಾಧಿಕಾರಿಗಳಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

ಬ್ರಿಮ್ಸ್ ಶುಶ್ರೂಷಕ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಬಿ., ಕಾರ್ಯಾಧ್ಯಕ್ಷ ವಿಜಯಕುಮಾರ ಟೊಂಪೆ, ಉಪಾಧ್ಯಕ್ಷರಾದ ಸಂತೋಷಕುಮಾರ ಸಿ., ರಾಜೇಶ ಎಸ್. ಚಿದ್ರಿ, ಶಶಿಕಲಾ, ಎಂ.ಡಿ. ಇಂತಿಯಾಜ್‍ಖಾನ್, ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಎ., ಕಾರ್ಯದರ್ಶಿ ಗೋರಕನಾಥ ಮಾಲೆ, ಸಹ ಕಾರ್ಯದರ್ಶಿಗಳಾದ ತುಕಾರಾಮ ಎಂ.ಆರ್., ಜಿಲಾನ ಜಿ., ಶ್ರೀಕಾಂತ ಎಚ್., ಪರಮೇಶ್ವರ ಎನ್ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.