ADVERTISEMENT

ಪರಿಶಿಷ್ಟ ವಿದ್ಯಾರ್ಥಿಗಳ ಕಾಲೇಜು ಶುಲ್ಕ ಪ್ರಾಚಾರ್ಯರ ಖಾತೆಗೆ

ಸಮಾಜ ಕಲ್ಯಾಣ ಆಯುಕ್ತರ ಸಂವಾದ: ವಿದ್ಯಾರ್ಥಿಗಳ ಹೆಸರು ನೋಂದಣಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 14:25 IST
Last Updated 6 ಸೆಪ್ಟೆಂಬರ್ 2021, 14:25 IST
ಅನಿಲಕುಮಾರ ಮೇಲ್ದೊಡ್ಡಿ
ಅನಿಲಕುಮಾರ ಮೇಲ್ದೊಡ್ಡಿ   

ಬೀದರ್: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಕಾಲೇಜು ಶುಲ್ಕವನ್ನು ಆಯಾ ಕಾಲೇಜು ಪ್ರಾಚಾರ್ಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ತಿಳಿಸಿದ್ದಾರೆ.

ಬೀದರ್ ತಾಲ್ಲೂಕಿನ ಕಾಲೇಜುಗಳ ಪ್ರಾಚಾರ್ಯರು ವಿದ್ಯಾರ್ಥಿಗಳ ಶುಲ್ಕ ಮರು ಪಾವತಿಗಾಗಿ ಸೆಪ್ಟೆಂಬರ್ 8 ರ ಒಳಗೆ ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ ಹೊಂದಿರುವ ಖಾತೆಯ ಝೆರಾಕ್ಸ್ ಪ್ರತಿಯನ್ನು ಕಚೇರಿಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.

2020-21ನೇ ಸಾಲಿನಿಂದ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ‘ವಿದ್ಯಾರ್ಥಿ ವೇತನ’ ಡಿ.ಬಿ.ಟಿ ಪೊರ್ಟಲ್ ಮೂಲಕ ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಕಾರಣ, ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ಬ್ಯಾಂಕ್ ಖಾತೆ, ಎನ್‍ಪಿಸಿಐನೊಂದಿಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಹೆಚ್ಚಿನ ಮಾಹಿತಿಗಾಗಿ ನಗರದ ಪ್ರತಾಪನಗರದಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08482-232528ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಆಯುಕ್ತರ ಸಂವಾದದಲ್ಲಿ ಪಾಲ್ಗೊಳ್ಳಿ

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಸೆಪ್ಟೆಂಬರ್ 14 ರಂದು ಆನ್‍ಲೈನ್‍ನಲ್ಲಿ ನಡೆಸಲಿರುವ ಸಂವಾದದಲ್ಲಿ ತಾಲ್ಲೂಕಿನ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಮೇಲ್ದೊಡ್ಡಿ ತಿಳಿಸಿದ್ದಾರೆ.
ಆಯುಕ್ತರು ಅಂದು ಸಂಜೆ 4.30 ರಿಂದ 7.30 ರ ವರೆಗೆ ಸಂವಾದ ನಡೆಸಲಿದ್ದಾರೆ. ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿ ಕೊಡಲಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೂಡ ಆಲಿಸಲಿದ್ದಾರೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಸಂವಾದದಲ್ಲಿ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

ಸಂವಾದದಲ್ಲಿ ಪಾಲ್ಗೊಳ್ಳಲು ಸೆ. 7 ರ ಒಳಗೆ ಆನ್‍ಲೈನ್‍ನಲ್ಲಿ http://164.100.133.163/samvada/ esamvadaRegistration. aspx ಲಿಂಕ್ ಬಳಸಿ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.