ADVERTISEMENT

ಸುಣ್ಣ, ಬಣ್ಣ ಕಾಣದ ಸರ್ಕಾರಿ ಶಾಲೆ

ಹಾಲಹಳ್ಳಿ ಥಾಂಡಾ: ಕೆಸರುಮಯವಾದ ಶಾಲಾ ಆವರಣ

​ಪ್ರಜಾವಾಣಿ ವಾರ್ತೆ
Published 6 ಜುಲೈ 2022, 4:04 IST
Last Updated 6 ಜುಲೈ 2022, 4:04 IST
ಖಟಕಚಿಂಚೋಳಿ ಸಮೀಪದ ಹಾಲಹಳ್ಳಿ (ಕೆ) ಥಾಂಡಾದ ಸರ್ಕಾರಿ ಶಾಲೆಯ ಆವರಣದಲ್ಲಿ ನೀರು ನಿಂತಿರುವುದು
ಖಟಕಚಿಂಚೋಳಿ ಸಮೀಪದ ಹಾಲಹಳ್ಳಿ (ಕೆ) ಥಾಂಡಾದ ಸರ್ಕಾರಿ ಶಾಲೆಯ ಆವರಣದಲ್ಲಿ ನೀರು ನಿಂತಿರುವುದು   

ಖಟಕಚಿಂಚೋಳಿ: ಸಮೀಪದ ಹಾಲಹಳ್ಳಿ (ಕೆ) ಥಾಂಡಾದ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಳೆದ ವಾರದಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ಶಾಲಾ ಆವರಣ ಸಂಪೂರ್ಣ ಕೆಸರುಮಯವಾಗಿದೆ.

ಒಂದರಿಂದ ಐದನೇ ತರಗತಿಯವರೆಗೆ ಇರುವ ಈ ಶಾಲೆಯಲ್ಲಿ ಸುಮಾರು 45 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಾರೆ. ಶಾಲಾ ಆವರಣದಲ್ಲಿ ಹೊಲಸು ನೀರು ಸಂಗ್ರಹವಾಗಿ ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ಅನಾರೋಗ್ಯದ
ಭೀತಿ ಕಾಡುತ್ತಿದೆ.

ಶಾಲೆಯಲ್ಲಿ ಒಟ್ಟು ಏಳು ಕೊಠಡಿಗಳಿವೆ. ಶಾಲೆಗೆ ಸುಣ್ಣ, ಬಣ್ಣ ಬಳಿದು ಹಲವಾರು ವರ್ಷಗಳೇ ಕಳೆದಿವೆ. ಅಲ್ಲದೇ ಶಾಲೆಯ ಕಟ್ಟಡ ಹಳೆಯದಾಗಿರುವುದರಿಂದ ಮಳೆ ಬಂದರೆ ಸಾಕು ನೀರು ಸೊರುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶಾಲೆ ಕಡೆ ಗಮನ ಹರಿಸಬೇಕು ಎಂಬುವುದು ಪೋಷಕರ ಆಗ್ರಹ.

ADVERTISEMENT

ಶಾಲೆಯ ಕಟ್ಟಡ ದುರಸ್ತಿ ಹಾಗೂ ಸುಣ್ಣ ಬಣ್ಣ ಬಳಿಯಲು ಪ್ರತ್ಯೇಕ ಅನುದಾನವಿಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆಗೆ ಮಾಹಿತಿ ಸಲ್ಲಿಸಲಾಗಿದೆ. ಶೀಘ್ರದಲ್ಲಿ ದುರಸ್ತಿ ಮಾಡಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ಮುಖ್ಯ ಶಿಕ್ಷಕ ಸಂಗಮೇಶ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಈಚೆಗೆ ಜಿಲ್ಲಾಧಿಕಾರಿ ನಡೆಸಿದ ಗ್ರಾಮ ವಾಸ್ತವ್ಯದಲ್ಲಿ ಶಾಲೆಯ ದುಸ್ಥಿತಿಯ ಬಗ್ಗೆ ಮನವಿ ಸಲ್ಲಿಸಲಾಗಿದೆ. ಆದರೂ ಕೂಡ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಪಂಚಾಯಿತಿ ಸದಸ್ಯ ಅಶೋಕ ಜಾಧವ್ ಬೇಸರ ವ್ಯಕ್ತಪಡಿಸುತ್ತಾರೆ.

ಕೆಲವು ಕಡೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆ ಇರುವುದರಿಂದ ಶಾಲೆಗಳು ಮುಚ್ಚುತ್ತಿವೆ. ಆದರೆ ಈ ಶಾಲೆಯಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಇದ್ದರೂ ಕೂಡ ಮೂಲ ಸೌಕರ್ಯಗಳ ಕೊರತೆಯಿಂದ ವರ್ಷದಿಂದ ವರ್ಷಕ್ಕೆ ದಾಖಲಾತಿಯಲ್ಲಿ ಇಳಿಕೆಯಾಗುತ್ತಿದೆ. ಹೀಗಾಗಿ ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಇಲ್ಲದಿದ್ದರೆ ಶಾಲೆಗೆ ಬೀಗ ಜಡಿದು ಪ್ರತಿಭಟನೆ ಮಾಡಲಾಗುವುದು ಎಂದು ಎಬಿವಿಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ಧ ಜಾಡರ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.