ADVERTISEMENT

ಬೇಲೂರ: ಪ್ರೌಢಶಾಲೆಗೆ ಕೊಸಂಬೆ, ಸಲಗರ ಭೇಟಿ

ಮಕ್ಕಳ ಹಕ್ಕುಗಳ ಆಯೋಗದಿಂದ ಸ್ವಯಂಪ್ರೇರಿತ ದೂರು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 3:17 IST
Last Updated 7 ಫೆಬ್ರುವರಿ 2026, 3:17 IST
ಹುಲಸೂರ ಸಮೀಪದ ಬೇಲೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ ಕೊಸಂಬೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು
ಹುಲಸೂರ ಸಮೀಪದ ಬೇಲೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ ಕೊಸಂಬೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು   

ಹುಲಸೂರ: ತಾಲ್ಲೂಕಿನ ಬೇಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿಯನ್ನು ವರ್ಗಾವಣೆ ಮಾಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಎಂಟು ದಿನ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ ಕೊಸಂಬೆ ಅವರು ಶುಕ್ರವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

8,9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಪ್ರತ್ಯೇಕವಾಗಿ ಸಂವಾದ ನಡೆಸಿ ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ನಿರಂತರ ಪ್ರತಿಭಟನೆಯಿಂದ ಕಲಿಕೆಗೆ ಅಡ್ಡಿಯಾಗಿದೆ, ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಎಂದು ಅಭಿಪ್ರಾಯಪಟ್ಟರು. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳುವುದಾಗಿ ತಿಳಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಕಿಯ ವಿರುದ್ಧ ವಿದ್ಯಾರ್ಥಿಗಳಲ್ಲಿ ನಕಾರಾತ್ಮಕ ಭಾವನೆ ಕಂಡುಬಂದಿದ್ದು, ಅಸಮಾಧಾನವನ್ನು ಲಿಖಿತವಾಗಿ ನೀಡಿದ್ದಾರೆ. ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ ತಿಂಗಳಿಗೆ ಕನಿಷ್ಠ ಒಮ್ಮೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡುವಂತೆ ಸೂಚಿಸಲಾಗಿದೆ ಎಂದು ಡಿಡಿಪಿಐ ತಿಳಿಸಿದರು.

ADVERTISEMENT

ಬಿಇಒ ಸಿದ್ಧವಿರಯ್ಯ ರುದ್ದನೂರ, ಕ್ಷೇತ್ರ ಸಮನ್ವಯಾಧಿಕಾರಿ ಪ್ರಭಾಕರ ಕಳಮಸೆ, ಬಿಸಿಯೂಟ ಅಧಿಕಾರಿ ಸಂಜೀವಕುಮಾರ ಕಾಂಗೆ, ಧರ್ಮೇಂದ್ರ ಭೋಸ್ಲೆ ಸೇರಿ ಹಲವರು ಉಪಸ್ಥಿತರಿದ್ದರು.

ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಪಾಲಕರ ಮನವಿ: ಬೇಲೂರು ಪ್ರೌಢಶಾಎಯ ವಿಜ್ಞಾನ ಶಿಕ್ಷಕಿ ಸಂಗೀತಾ ಅವರ ಅಸಭ್ಯ ವರ್ತನೆ, ಅವಾಚ್ಯ ಪದಗಳ ಬಳಕೆ ಹಾಗೂ ಬೋಧನೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ ವಿದ್ಯಾರ್ಥಿಗಳ ಪಾಲಕರು ಶಿಕ್ಷಕಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳು ಈ ಹಿಂದೆ ಲಿಖಿತ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಜರುಗಿಲ್ಲ ಎಂದು ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರಿಗೆ ಮನವಿ ಸಲ್ಲಿಸಿದರು. 

ಗ್ರಾಮಸ್ಥರಾದ ನವೀನ ಗುಂಗೆ, ಕಾಶಿನಾಥ ರಾಚಪ್ಪ, ಮಲ್ಲು ಬರಗಾಳೆ, ಸಂಗಪ್ಪ ಜವಳಗೆ, ಸಿದ್ದು ಪಾಟೀಲ, ಕಲೀಂ ಸೇರಿ ಹಲವರು ಉಪಸ್ಥಿತರಿದ್ದರು. 

ಶಾಸಕ ಸಲಗರ ಭೇಟಿ

ಬೇಲೂರು ಸರ್ಕಾರಿ ಪ್ರೌಢಶಾಲೆಗೆ ಶಾಸಕ ಶರಣು ಸಲಗರ ಭೇಟಿನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ‘ಶಾಲೆ ಬಿಟ್ಟ ಮಕ್ಕಳನ್ನು ಹೆಚ್ಚಾಗಿ ಶಾಲೆಗೆ ಸೇರಿಸುವ ಪ್ರಯತ್ನ ಮಾಡಬೇಕು. ಪರೀಕ್ಷೆಗಳು ಸಮೀಪಿಸುತ್ತಿದ್ದು ಉತ್ತಮ ಅಂಕಗಳಿಸಿ ಶಾಲೆಗೆ ಕೀರ್ತಿ ತರಬೇಕು. ಶಿಕ್ಷಕಿ ವಿರುದ್ಧ ಈಗಾಗಲೇ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಇನ್ನು ಮುಂದೆ ಶಾಲೆಯಲ್ಲಿ ಕಲಿಕೆ ಸಮಸ್ಯೆಯಾಗದ ಹಾಗೆ ನೋಡಿಕೊಳ್ಳಲಾಗುವುದು’ ಎಂದರು. ಬಳಿಕ ಮುಖ್ಯಶಿಕ್ಷಕರೊಂದಿಗೆ ಮಾತನಾಡಿದ ಅವರು ‘10ನೇ ತರಗತಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಿಷಯವಾರು ಅತಿಥಿ ಶಿಕ್ಷಕರನ್ನು ನೇಮಿಸಬೇಕು. ಮಕ್ಕಳು ಹೆಚ್ಚಿನ ಅಂಕಗಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.