ADVERTISEMENT

ಜ್ಞಾನ ವೃದ್ಧಿಗೆ ವಿಜ್ಞಾನ ಪ್ರದರ್ಶನ ಸಹಕಾರಿ

ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಅಭಿಮತ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 15:26 IST
Last Updated 10 ಜನವರಿ 2019, 15:26 IST
ವಿದ್ಯಾರ್ಥಿಗಳು ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ.ಎಚ್‌.ಆರ್.ಮಹಾದೇವ ವೀಕ್ಷಿಸಿದರು
ವಿದ್ಯಾರ್ಥಿಗಳು ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ.ಎಚ್‌.ಆರ್.ಮಹಾದೇವ ವೀಕ್ಷಿಸಿದರು   

ಬೀದರ್: ‘ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಹಾಗೂ ಜ್ಞಾನ ವೃದ್ಧಿಸಲು ವಿಜ್ಞಾನ ವಸ್ತು ಪ್ರದರ್ಶನ ಸಹಕಾರಿಯಾಗಿದೆ’ ಎಂದು ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇಲ್ಲಿಯ ವಿದ್ಯಾನಗರ ಕಾಲೊನಿಯ ವಿ.ಕೆ. ಇಂಟರ್‌ನ್ಯಾಷನಲ್ ಶಾಲಾ ಕಾಲೇಜು ಹಾಗೂ ಲಕ್ಷ್ಮೀಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಗುರುವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ, 2019ನೇ ಸಾಲಿನ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿ ಜೀವನವು ಭವಿಷ್ಯದ ಪ್ರಮುಖ ಘಟ್ಟವಾಗಿದೆ. ಆದ್ದರಿಂದ ಪ್ರತಿಯೊಂದು ವಿಷಯದ ಬಗೆಗೆ ಅರಿತುಕೊಳ್ಳಬೇಕು. ಈ ಮೂಲಕ ಜ್ಞಾನಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ಬಸವತತ್ವ ಶಿಕ್ಷಣ ಸಂಸ್ಥೆಯು ಸಮಯಪ್ರಜ್ಞೆ, ಶಿಸ್ತು, ಸಂಯಮದೊಂದಿಗೆ ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವುದು ಪ್ರಶಂಸನೀಯವಾಗಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಸವ ತತ್ವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೈಜಿನಾಥ ಕಮಠಾಣೆ ಮಾತನಾಡಿ, ‘ಮೂರೂವರೆ ದಶಕದ ಹಿಂದೆ ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡಲು ಆರಂಭಿಸಿದ ಸಂಸ್ಥೆಯು ಹೆಮ್ಮರವಾಗಿ ಬೆಳೆದಿದೆ. ಜಿಲ್ಲೆಯ ಶೈಕ್ಷಣಿಕ ಪ್ರಗತಿಗೂ ತನ್ನದೇ ಆದ ಕೊಡುಗೆ ನೀಡಿದೆ’ ಎಂದು ತಿಳಿಸಿದರು.

‘ಸಂಸ್ಥೆಯು ನಿರ್ಗತಿಕ ಹಾಗೂ ಬಡ ಮಕ್ಕಳಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ. ಪ್ರತಿ ವರ್ಷ ಉತ್ತಮ ಫಲಿತಾಂಶವೂ ಬರುತ್ತಿದೆ’ ಎಂದು ಹೇಳಿದರು.

ದಿನಚರಿ ಬಿಡುಗಡೆ ಮಾಡಿದ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಾದೇಶಿಕ ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಡಾ. ಜಗನ್ನಾಥ ಹೆಬ್ಬಾಳೆ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಗುರಿ ಇಟ್ಟುಕೊಳ್ಳಬೇಕು. ಸತತ ಪ್ರಯತ್ನದ ಮೂಲಕ ಕನಸು ನನಸು ಮಾಡುವತ್ತ ಹೆಜ್ಜೆ ಹಾಕಬೇಕು’ ಎಂದು ಸಲಹೆ ನೀಡಿದರು.

ಬೀದರ್ ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕ ಬಲಭೀಮ ಕಾಂಬಳೆ, ಆರ್ಕಿಟೆಕ್ಟ್ ಸಂತೋಷ ಸುಂಕದ, ಬಸವ ತತ್ವ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ದಿಲೀಪ ಕಮಠಾಣೆ, ಡಾ. ಸಾವಿತ್ರಿಬಾಯಿ (ನೀಲಗಂಗಾ) ಹೆಬ್ಬಾಳೆ, ಕಟ್ಟಡ ದಾನಿ ಲಕ್ಷ್ಮೀಬಾಯಿ ಕಮಠಾಣೆ, ರಾಜಕುಮಾರ ಹೆಬ್ಬಾಳೆ, ವೈಶಾಲಿ ಕಮಠಾಣೆ, ವಿ.ಕೆ. ಇಂಟರ್‌ನ್ಯಾಷನಲ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶಿವಲೀಲಾ ಟೊಣ್ಣೆ, ಲಕ್ಷ್ಮೀಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದ ಪ್ರಭಾರ ಪ್ರಾಚಾರ್ಯ ಧನರಾಜ್ ಪಾಟೀಲ ಇದ್ದರು.

ಪ್ರಕಾಶ ಲಕ್ಷ್ಯೆಟ್ಟಿ ಸ್ವಾಗತಿಸಿದರು.

ಮಹಮ್ಮದ್ ಯುನೂಸ್ ನಿರೂಪಿಸಿದರು. ನಾಗೇಶ ಬಿರಾದಾರ ವಂದಿಸಿದರು. ವಿಜ್ಞಾನ ವಸ್ತು ಪ್ರದರ್ಶನದಲ್ಲಿ 1 ರಿಂದ 9ನೇ ತರಗತಿ ವರೆಗಿನ ಮಕ್ಕಳು ಸಿದ್ಧಪಡಿಸಿದ್ದ ವಿವಿಧ ಮಾದರಿಗಳು ಗಮನ ಸೆಳೆದವು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.