ADVERTISEMENT

ತಾಲ್ಲೂಕು ಕೇಂದ್ರಗಳಲ್ಲಿ ಕೋವಿಡ್‌ ಸೆಂಟರ್‌ ಸ್ಥಾಪಿಸಿ

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಮುಜಾಹಿದ್ ಪಾಷಾ ಕುರೇಶಿ ಮನವಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 14:30 IST
Last Updated 5 ಏಪ್ರಿಲ್ 2021, 14:30 IST
ಮುಜಾಹಿದ್ ಪಾಷಾ ಕುರೇಶಿ
ಮುಜಾಹಿದ್ ಪಾಷಾ ಕುರೇಶಿ   

ಬೀದರ್: ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ನಿತ್ಯ ಹೆಚ್ಚುತ್ತಲೇ ಇವೆ. ಪರಿಸ್ಥಿತಿ ಕೈಮೀರುವ ಮುಂಚೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಮುಜಾಹಿದ್ ಪಾಷಾ ಕುರೇಶಿ ಮನವಿ ಮಾಡಿದ್ದಾರೆ.

ಕೋವಿಡ್‌ ಪ್ರಕರಣಗಳ ತ್ವರಿತ ಪತ್ತೆಗೆ ಹೋಬಳಿಗೊಂದು ತಪಾಸಣೆ ಕೇಂದ್ರ ಸ್ಥಾಪಿಸಬೇಕು. ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ (ಸಿಸಿಸಿ) ಸ್ಥಾಪಿಸಬೇಕು. ಲ್ಯಾಬ್ ಹಾಗೂ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಎಲ್ಲ ರೀತಿಯ ಮೂಲಸೌಕರ್ಯ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ಪ್ರತಿ ಲ್ಯಾಬ್ ಮತ್ತು ಕೋವಿಡ್ ಕೇರ್ ಸೆಂಟರ್‌ಗೆ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕೋವಿಡ್-19 ಆಸ್ಪತ್ರೆಯಲ್ಲಿ ಬೆಡ್, ವೆಂಟಿಲೇಟರ್, ಐಸಿಯು ಬೆಡ್‍ಗಳ ಸಂಖ್ಯೆ ಹೆಚ್ಚಿಸಬೇಕು. ಅದಕ್ಕೆ ತಕ್ಕಂತೆ ವೈದ್ಯರು, ಅರೆ ವೈದ್ಯಕೀಯ ಹಾಗೂ ಇತರ ಸಿಬ್ಬಂದಿಯ ವ್ಯವಸ್ಥೆ ಮಾಡಬೇಕು. ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಕೇವಲ ರೋಗಲಕ್ಷಣ ಇರುವ ಮತ್ತು ಗಂಭೀರ ಪ್ರಕರಣಗಳನ್ನು ಮಾತ್ರ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ರೋಗ ಲಕ್ಷಣವಿಲ್ಲದ ಪ್ರಕರಣಗಳನ್ನು ತಾಲ್ಲೂಕು ಮಟ್ಟದ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ನಿರ್ವಹಿಸಬೇಕು. ಕ್ವಾರಂಟೈನ್, ಐಸೋಲೇಷನ್, ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೋವಿಡ್-19 ಸಮರ್ಪಕ ನಿರ್ವಹಣೆಗೆ ಗ್ರಾಮ ಪಂಚಾಯಿತಿ ಮಟ್ಟದ ಟಾಸ್ಕ್‌ಫೋರ್ಸ್‍ಗಳನ್ನು ಸಕ್ರಿಯಗೊಳಿಸಬೇಕು. ಕರ್ನಾಟಕ ಪೌರ ನಿಗಮ ಕಾಯ್ದೆಯನ್ವಯ ಸ್ಥಾಪಿಸಲಾಗುವ ವಾರ್ಡ್ ಕಮಿಟಿಗಳನ್ನು ಕ್ರಿಯಾಶೀಲಗೊಳಿಸಿ ಪ್ರತಿಯೊಂದು ವಾರ್ಡ್‍ಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.