ಬೀದರ್: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡಿರುವ ಶಾರದಮ್ಮ ಅನಿಲಕುಮಾರ ಮಾಳಗೆ ಇದೀಗ ವಾಣಿಜ್ಯ ತೆರಿಗೆ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಪದವಿ ನಂತರ ಅಲೆಮಾರಿ ಜನಾಂಗದ ಮಕ್ಕಳಿಗೆ ಉಚಿತ ಪಾಠ ಮಾಡಿ ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದ ಶಾರದಮ್ಮ, ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಶಕ್ತಿ ಕೇಂದ್ರದಲ್ಲಿ ತಾತ್ಕಾಲಿಕ ಆಧಾರದ ಮೇಲೆ ಮಹಿಳಾ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಜ್ಞಾನಸುಧಾ ಸಿವಿಲ್ ಸರ್ವಿಸೆಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದರು.
ಶಾರದಮ್ಮ ಅನಿಲಕುಮಾರ ಅವರನ್ನು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸನ್ಮಾನಿಸಿದರು.
ಆಡಳಿತ ಸೇವೆಯಲ್ಲಿ ತೊಡಗಿಸಿಕೊಳ್ಳ ಬಯಸುವ ಆಕಾಂಕ್ಷಿಗಳಿಗೆ ಜಿಲ್ಲೆಯಲ್ಲಿಯೇ ಯುಪಿಎಸ್ಸಿ, ಕೆಪಿಎಸ್ಸಿ ಪರೀಕ್ಷೆಗೆ ಸಿದ್ಧತೆಗೆ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.
ಜ್ಞಾನಸುಧಾ ಸಿವಿಲ್ ಸರ್ವಿಸ್ ಅಕಾಡೆಮಿಯ ತರಬೇತಿ ಹಾಗೂ ಮಾರ್ಗದರ್ಶನದಿಂದಾಗಿ ಕೆಎಎಸ್ ಪರೀಕ್ಷೆಯಲ್ಲಿ ಸಾಧನೆಗೈಯಲು ಸಾಧ್ಯವಾಗಿದೆ ಎಂದು ಶಾರದಮ್ಮ ಹೇಳಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ, ನಿರ್ದೇಶಕ ಮುನೇಶ್ವರ ಲಾಖಾ, ಸಿವಿಲ್ ಸರ್ವಿಸೆಸ್ ಅಕಾಡೆಮಿಯ ನಿರ್ದೇಶಕ ಬಾಲಾಜಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.