ಬೀದರ್: ನಗರದ ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿಗೆ ಹೊಂದಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್.ಬಿ.ಐ) ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಅಪರಿಚಿತರು ಕಾರದ ಪುಡಿ ಎರಚಿ, ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಇನ್ನೊಬ್ಬರ ವಿವರ ಇನ್ನಷ್ಟೇ ತಿಳಿಯಬೇಕಿದೆ. ಬ್ಯಾಂಕಿನ ಕಚೇರಿ ಎದುರು ರಕ್ತಸಿಕ್ತ ಸ್ಥಿತಿಯಲ್ಲಿ ಅವರ ದೇಹ ಬಿದ್ದಿದೆ. ಘಟನೆಯ ವಿಷಯ ತಿಳಿದು ನ್ಯಾಯಾಲಯ ಹಾಗೂ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ನೂರಾರು ಜನ ಅಲ್ಲಿ ಜಮಾಯಿಸಿದರು. ಇಡೀ ಪ್ರದೆಶದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಜನರನ್ನು ಚದುರಿಸಿದರು.
ಏಜೆನ್ಸಿ ಸಿಬ್ಬಂದಿ ಎಂದಿನಂತೆ ಅವರ ವಾಹನದಲ್ಲಿ ಹಣದ ಸಮೇತ ಬ್ಯಾಂಕಿಗೆ ಬಂದಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತರು ಹಣ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಹಣ ಕೊಡದಿದ್ದಾಗ ಕಾರದ ಪುಡಿ ಎರಚಿ, ಬಳಿಕ ಗುಂಡಿನ ದಾಳಿ ನಡೆಸಿ, ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಜೆ ಧಾವಿಸಿದ್ದಾರೆ.
ಮೃತರು ಬೀದರ್ ನ ಚಿದ್ರಿ ನಿವಾಸಿ ಗಿರಿ ವೆಂಕಟೇಶ (40) ಎಂದು ಗುರುತಿಸಲಾಗಿದೆ.
₹93 ಲಕ್ಷದ ಪೆಟ್ಟಿಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಬ್ಯಾಂಕಿನ ಮೂಲಗಳು ತಿಳಿಸಿವೆ.
ಬೆಳಿಗ್ಗೆ 10.55ರಿಂದ 11 ಗಂಟೆ ಸುಮಾರಿಗೆ ಬೀದರ್ ನಗರದ ಎಸ್ಬಿಐ ಮುಖ್ಯ ಕಚೇರಿ ಬಳಿ ್ರೋಡೆ ನಡೆದಿದೆ. ಎಟಿಎಂಗೆ ಹಣ ತುಂಬುತ್ತಿದ್ದ ವೇಳೆ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಒಬ್ಬರನ್ನು ಕೊಂದಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಣದ ಟ್ರಂಕ್ ತೆರೆದಿದ್ದಾರೆ ಎಂಬ ಮಾಹಿತಿ ಇದೆ ಎಂದು ಎಸ್ಪಿ ಪ್ರದೀಪ್ ಗುಂಟಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.