ADVERTISEMENT

ಬೀದರ್: ಸಕಲ ಸಿದ್ಧತೆಗೆ ರುದ್ರೇಶ ಸೂಚನೆ

14ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 14:46 IST
Last Updated 10 ಜನವರಿ 2020, 14:46 IST
ಬೀದರ್‌ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿದ್ಧರಾಮೇಶ್ವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರು
ಬೀದರ್‌ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿದ್ಧರಾಮೇಶ್ವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘ ಸಂಸ್ಥೆಗಳ ಮುಖಂಡರು   

ಬೀದರ್: ‘ಜಿಲ್ಲೆಯಲ್ಲಿ ಜ.14ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿದ್ಧರಾಮೇಶ್ವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮೆರವಣಿಗೆಯಲ್ಲಿ ಸುಮಾರು ಒಂದು ಸಾವಿರ ಜನರು ಪಾಲ್ಗೊಳ್ಳುವಂತಾಗಬೇಕು. ಮೆರವಣಿಗೆಗೆ ಶೋಭೆ ಬರುವಂತೆ ಮುಂಚಿತವಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ಸಮಾಜದ ಮುಖಂಡರಿಗೆ ತಿಳಿಸಿದರು.

ADVERTISEMENT

‘ಸರ್ಕಾರಿ, ಅರೆ ಸರ್ಕಾರಿ ಕಚೇರಿ, ಸಂಘ ಸಂಸ್ಥೆಗಳಲ್ಲಿ ಬೆಳಿಗ್ಗೆ 9.30 ಗಂಟೆಗೆ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಬೆಳಿಗ್ಗೆ 9.50ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇರಬೇಕು. ಮೆರವಣಿಗೆಯ ನಂತರ 11.30ಕ್ಕೆ ನಡೆಯುವ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು’ ಎಂದು ಹೇಳಿದರು.

‘ಶಾಲಾ ಕಾಲೇಜುಗಳಲ್ಲಿ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರವನ್ನು ಅಚ್ಚುಕಟ್ಟಾದ ಸ್ಥಳದಲ್ಲಿಟ್ಟು ಪೂಜೆ ಸಲ್ಲಿಸುವಂತೆ ಶಾಲಾ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

‘ಮೆರವಣಿಗೆಯಲ್ಲಿ ಡೊಳ್ಳು ಕುಣಿತ ತಂಡ ಹಾಗೂ ಒಂದು ಬ್ಯಾಂಡ್ ತಂಡದ ವ್ಯವಸ್ಥೆ ಮಾಡಬೇಕು. ರಂಗ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಯೋಗಿ ಸಿದ್ಧರಾಮೇಶ್ವರರ ವಚನಗಳನ್ನು ಹಾಡಲು ಒಬ್ಬ ಸಂಗೀತಗಾರನ ವ್ಯವಸ್ಥೆ ಮಾಡಬೇಕು’ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

‘ನಗರಸಭೆ ಆಯುಕ್ತರು ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗೆ ವಾಹನದ ವ್ಯವಸ್ಥೆ ಮಾಡಬೇಕು.
ವೃತ್ತಗಳಿಗೆ ದೀಪಾಲಂಕಾರ, ಮೆರವಣಿಗೆ ಸಾಗುವ ರಸ್ತೆಗಳ ಸ್ವಚ್ಛತೆ ಹಾಗೂ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು’ ಎಂದರು.

‘ಮೆರವಣಿಗೆ ಹೊರಡುವ ಸಮಯದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡುವಂತೆ ಮತ್ತು ಸಾರ್ವಜನಿಕರ ಸಂಚಾರಕ್ಕೆ ತೊಡಕಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು’ ಎಂದು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾ ಭೋವಿ ಸಮಾಜದ ಅಧ್ಯಕ್ಷ ಮಾಣಿಕರಾವ್ ವಾಡೇಕರ್ ಮಾತನಾಡಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಬೇಕು. 11.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ ಮುಖ್ಯ ಕಾರ್ಯಕ್ರಮ ನಡೆಸಬೇಕು’ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಲು ಹುಮನಾಬಾದ್ ಸಾಹಿತಿ ಡಾ.ಗವಿಸಿದ್ದಪ್ಪ ಪಾಟೀಲ ಅವರನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಅವರು ಕಾರ್ಯಕ್ರಮದ ಮಾಹಿತಿ ನೀಡಿದರು.

ಮುಖಂಡರಾದ ಪುಂಡಲಿಕ ನಿಂಗದಳ್ಳಿ, ತುಕಾರಾಮ ಹಳ್ಳಿಖೇಡ (ಬಿ), ಗೋವಿಂದ ಬಗದಲ್, ಲಕ್ಷ್ಮಣ ಯಲ್ಲಪ್ಪ ಚಿಟಗುಪ್ಪ, ವಿಜಯಕುಮಾರ ಸೋನಾರೆ, ಸಂತೋಷ ಜೋಳದಾಬಕೆ, ಸುನೀಲ ಭಾವಿಕಟ್ಟಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.