ADVERTISEMENT

ದೈಹಿಕ ಸ್ವಾಸ್ಥ್ಯಕ್ಕೆ ಕ್ರೀಡೆಯಲ್ಲಿ ಪಾಲ್ಗೊಳ್ಳಿ: ಎಚ್.ಆರ್.ಮಹಾದೇವ

ಸರ್ಕಾರಿ ನೌಕರರ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 8:55 IST
Last Updated 13 ಫೆಬ್ರುವರಿ 2020, 8:55 IST
ಬೀದರ್ ತಾಲ್ಲೂಕಿನ ಕಮಠಾಣ ಬಳಿ ಇರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಬುಧವಾರ ಬಲೂನ್ ಹಾರಿ ಬಿಡುವ ಮೂಲಕ ಉದ್ಘಾಟಿಸಿದರು
ಬೀದರ್ ತಾಲ್ಲೂಕಿನ ಕಮಠಾಣ ಬಳಿ ಇರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಬುಧವಾರ ಬಲೂನ್ ಹಾರಿ ಬಿಡುವ ಮೂಲಕ ಉದ್ಘಾಟಿಸಿದರು   

ಜನವಾಡ: ‘ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಲು ನೌಕರರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬೀದರ್ ತಾಲ್ಲೂಕಿನ ಕಮಠಾಣ ಸಮೀಪ ಇರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ, ಉಲ್ಲಾಸದಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ.ಕ್ರೀಡಾಕೂಟ ವರ್ಷಕೊಮ್ಮೆ ಆಯೋಜಿಸುವ ಬದಲು ಪ್ರತಿ ತಿಂಗಳು ನಡೆಸಿದ್ದಲ್ಲಿ ನೌಕರರಲ್ಲಿ ಕ್ರೀಡಾ ಆಸಕ್ತಿ ಬೆಳೆಯಲು ಸಹಕಾರಿಯಾಗುತ್ತದೆ’ ಎಂದರು.

ADVERTISEMENT

ಕ್ರೀಡಾ ಧ್ವಜಾರೋಹಣ ಮಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಮಾತನಾಡಿ, ‘ನೌಕರರು ಕೆಲಸದ ಒತ್ತಡದ ನಡುವೆಯೂ ದಿನಕ್ಕೆ ಒಂದು ಗಂಟೆಯಾದರೂ ಕ್ರೀಡೆಗೆ ಸಮಯ ಮೀಸಲಿಡಬೇಕು’ ಎಂದು ಸಲಹೆ ಮಾಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಅಧ್ಯಕ್ಷತೆ ವಹಿಸಿದ್ದರು.

ಸಂಘದ ಗೌರವ ಅಧ್ಯಕ್ಷ ರಮೇಶ ಮಠಪತಿ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ರಾಜ್ಯ ಪರಿಷತ್ ಸದಸ್ಯ ಪ್ರಕಾಶ ಮಡಿವಾಳ, ಖಜಾಂಚಿ ಅಶೋಕ ರೆಡ್ಡಿ, ಕ್ರೀಡಾ ಕಾರ್ಯದರ್ಶಿ ಮನೋಹರ ಕಾಶಿ, ಅಬ್ದುಲ್ ಸತ್ತಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಅಮೃತ ಎನ್.ಅಷ್ಟಗಿ ಇದ್ದರು.

ಸಂಘದ ಕಾರ್ಯಾಧ್ಯಕ್ಷ ರಾಜಕುಮಾರ ಪಾಟೀಲ ನಿರೂಪಿಸಿದರು. ಶಿವಕುಮಾರ ಬಾವಗೆ ವಂದಿಸಿದರು.

ನೌಕರರಿಗಾಗಿ ವಿವಿಧ ಸ್ಪರ್ಧೆಗಳು ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.