ADVERTISEMENT

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಅಗತ್ಯ: ಬಸವಲಿಂಗ ಪಟ್ಟದ್ದೇವರು

​ಪ್ರಜಾವಾಣಿ ವಾರ್ತೆ
Published 21 ಮೇ 2022, 4:21 IST
Last Updated 21 ಮೇ 2022, 4:21 IST
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ 99ಕ್ಕಿಂತಲೂ ಅಧಿಕ ಅಂಕ ಪಡೆದ 12 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ.ಬಸವಲಿಂಗ ಪಟ್ಟದ್ದೇವರು ಇದ್ದರು
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ 99ಕ್ಕಿಂತಲೂ ಅಧಿಕ ಅಂಕ ಪಡೆದ 12 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ.ಬಸವಲಿಂಗ ಪಟ್ಟದ್ದೇವರು ಇದ್ದರು   

ಭಾಲ್ಕಿ: ‘ಎಲ್ಲ ವಿದ್ಯಾರ್ಥಿಗಳಲ್ಲಿ ಅದ್ಭುತ ಶಕ್ತಿ, ಕಲಿಕಾಸಕ್ತಿ ಅಡಗಿರುತ್ತದೆ. ಶಿಕ್ಷಕರಿಂದ ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗಬೇಕು. ಅಂದಾಗ ವಿದ್ಯಾರ್ಥಿಗಳಲ್ಲಿನ ನೈಜ ಪ್ರತಿಭೆ ಹೊರಬರಲು ಸಾಧ್ಯ’ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಅವರು ಹೇಳಿದರು.

ತಾಲ್ಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಶುಕ್ರವಾರ ನಡೆದ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಶಿಲ್ಪಿಗೆ ಬಂಡೆಯಲ್ಲಿನ ವಿಗ್ರಹ ಹೊರತರುವ ಜಾಣ್ಮೆ, ಕೌಶಲ ಇರುತ್ತದೆ. ಹಾಗೆಯೇ ಶಿಕ್ಷಕರು ಆದವರೂ ವಿದ್ಯಾರ್ಥಿಗಳ ಮನಸ್ಥಿತಿ, ಬುದ್ಧಿಮಟ್ಟ ಅರಿತು ಬೋಧಿಸಿ ಅವರಲ್ಲಿ ಕಲಿಕಾ ಶಕ್ತಿಯನ್ನು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿಯೇ ಕೆಲಸ ಮಾಡಬೇಕು. ಇದರಿಂದ ಉತ್ತಮ ಫಲಿತಾಂಶ ಬರುತ್ತದೆ. ಶಾಲೆಗೂ ಹೆಸರು ಬರುತ್ತದೆ ಎಂದು ಬಸವಲಿಂಗ ಪಟ್ಟದ್ದೇವರು ಹೇಳಿದರು.

ADVERTISEMENT

ಆಡಳಿತಾಧಿಕಾರಿ ಮೋಹನರೆಡ್ಡಿ ಮಾತನಾಡಿ,‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿಯೇ ದಾಖಲೆ ರೀತಿಯಲ್ಲಿ ಗುರುಕುಲದ 234 ವಿದ್ಯಾರ್ಥಿಗಳು ಅಗ್ರಶ್ರೇಣಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ’ ಎಂದರು.

ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕವಾಗಿ ಮಾತನಾಡಿ,‘ಕನ್ನಡ ವಿಷಯದಲ್ಲಿ 44, ಗಣಿತ 77, ಹಿಂದಿ 74, ವಿಜ್ಞಾನ 21, ಸಮಾಜ ವಿಜ್ಞಾನ ವಿಷಯದಲ್ಲಿ 102 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದು ಅದ್ವಿತೀಯ ಸಾಧನೆಗೈದಿದ್ದಾರೆ’ ಎಂದು ಹೇಳಿದರು.

ನಿರ್ದೇಶಕ ಶಶಿಧರ ಕೋಸಂಬೆ, ರವೀಂದ್ರ ಚಿಡಗುಪ್ಪೆ ಇದ್ದರು.

ಲಕ್ಷ್ಮಣ ಮೇತ್ರೆ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.