ಔರಾದ್: ಐಪಿಎಲ್ನಲ್ಲಿ ಗೆದ್ದ ಆರ್ಸಿಬಿ ವಿಜಯೋತ್ಸವ ಆಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಕಾರಣ. ಹೀಗಾಗಿ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅಧ್ಯಕ್ಷ ಸೋಮನಾಥ ಪಾಟೀಲ ಆಗ್ರಹಿಸಿದರು.
‘ಸರ್ಕಾರವೇ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಿ 11 ಜನರ ಬಲಿ ಪಡೆದಿದೆ. ತಮ್ಮ ಈ ವೈಫಲ್ಯ ಮುಚ್ಚಿಕೊಳ್ಳಲು ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದು ಸರಿಯಲ್ಲ. ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ಜನಸಾಮಾನ್ಯರಲ್ಲಿ ಭೀತಿ ಆವರಿಸಿದೆ’ ಎಂದು ಬಿಜೆಪಿ ಮುಖಂಡರು ಟೀಕಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ ಪಾಟೀಲ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಶಿವರಾಜ ಅಲ್ಮಾಜೆ, ಮುಖಂಡ ವಸಂತ ವಕೀಲ, ಖಂಡೋಬಾ ಕಂಗಟೆ, ಬಸವರಾಜ ಹಳ್ಳೆ, ಬಾಲಾಜಿ ಕಾಸಲೆ, ಅಶೋಕ ಅಲ್ಮಾಜೆ, ಪ್ರಕಾಶ ಜೀರ್ಗೆ, ದಯಾನಂದ ಘುಳೆ, ಪ್ರವೀಣ ಕಾರಬಾರಿ, ಸಂದೀಪ ಪಾಟೀಲ, ಕೇರಬಾ ಪವಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.