ಬೀದರ್: ‘ಸ್ವಚ್ಛ ಭಾರತ ಅಭಿಯಾನಕ್ಕೆ ಕೈಜೋಡಿಸುವ ಮೂಲಕ ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ನೆರವಾಗಬೇಕು’
ಎಂದು ಬೀದರ್ ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ ಅಭಿಪ್ರಾಯಪಟ್ಟರು.
ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಂಗಳವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛ ಭಾರತ ಅಭಿಯಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಬೀದರ್ ನಗರವನ್ನು ಸ್ವಚ್ಛ ನಗರವನ್ನಾಗಿಸಲು ಪ್ರತಿಯೊಬ್ಬರೂ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಬೇಕು’ ಎಂದು ಮನವಿ ಮಾಡಿದರು.
‘ಸ್ವಚ್ಛ ಭಾರತ ಅಭಿಯಾನದ ಜಿಲ್ಲಾ ನೋಡಲ್ ಅಧಿಕಾರಿ ಗೌತಮ ಅರಳಿ ಮಾತನಾಡಿ, ‘ಸ್ವಚ್ಛ ಸರ್ವೇಕ್ಷಣೆಯಲ್ಲಿ ಬೀದರ ನಗರಕ್ಕೆ 137ನೇ ಸ್ಥಾನ ದೊರಕಿದೆ. ಮೈಸೂರಿನಂತೆ ಬೀದರ್ ನಗರವನ್ನು ಸಹ ಸ್ವಚ್ಛ ನಗರವನ್ನಾಗಿಸಲು ಪ್ರತಿಯೊಬ್ಬರು ಪ್ಲಾಸ್ಟಿಕ್ ತ್ಯಜಿಸಬೇಕು’ ಎಂದು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಬಿ.ಮನೋಹರ ಅಧ್ಯಕ್ಷತೆ ವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಚ್ಚೇಂದ್ರ ವಾಘಮಾರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಗ್ರಂಥಪಾಲಕ ತನ್ವೀರ್ ಇಕ್ಬಾಲ್, ಕ್ಷೇತ್ರ ಜನಸಂಪರ್ಕ ಅಧಿಕಾರಿ ನಾಗಪ್ಪ ಅಂಬಗೋಳ, ಪ್ರಾಧ್ಯಾಪಕರಾದ ಡಾ.ನವರಂಗ, ಡಾ.ರಾಜಕುಮಾರ ಅಲ್ಲೂರೆ, ಡಾ.ತುಮಕುಂಟೆ, ಎನ್ಎಸ್ಎಸ್ ಅಧಿಕಾರಿ ಬಸವರಾಜ ರಾಜೋಳಿ ಇದ್ದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ, ರಂಗೋಲಿ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಲಾವಿದ ದೇವಿದಾಸ ಚಿಮಕೋಡ ನೇತೃತ್ವದ ಕಲಾ ತಂಡದವರು ‘ಬದಲಾದ ಗೌಡ’ ಕಿರು ನಾಟಕವನ್ನು ಪ್ರದರ್ಶಿಸಿದರು. ರಾಮಕೃಷ್ಣ ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಶಿವಕುಮಾರ ಉಪ್ಪೆ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.