ಬಸವಕಲ್ಯಾಣ: ‘ಬಂಜಾರಾ ಸಮಾಜದ ಅಭಿವೃದ್ಧಿಗೆ ಬದ್ಧವಾಗಿರುವ ಬಿಜೆಪಿಗೆ ಬೆಂಬಲ ನೀಡಬೇಕು. ಬಿ.ಎಸ್.ಯಡಿಯೂರಪ್ಪ ಸರ್ಕಾರವನ್ನು ಬಲಪಡಿಸಬೇಕು’ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಹೇಳಿದರು.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಯುಕ್ತ ನಗರದ ಶಾಂತಿನಿಕೇತನ ಮೈದಾನದಲ್ಲಿ ಶನಿವಾರ ನಡೆದ ಬಂಜಾರ ಸಮಾಜದ ಮತದಾರರ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಬಿಜೆಪಿ ಸರ್ಕಾರ ಜನಸಾಮಾನ್ಯರಿಗೆ ಅನುಕೂಲವಾಗುವಂಥ ಹತ್ತು ಹಲವು ಯೋಜನೆಗಳನ್ನು ರೂಪಿಸಿದೆ. ಈ ಯೋಜನೆಗಳ ಕುರಿತು ಪ್ರತಿಯೊಬ್ಬರಿಗೆ ಮಾಹಿತಿ ನೀಡಬೇಕು. ಈ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಯತ್ನಿಸಬೇಕು’ ಎಂದು ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಶರಣು ಸಲಗರ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಸತಿ ಸಚಿವ ವಿ.ಸೋಮಣ್ಣ, ಕಲಬುರ್ಗಿ ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಅವಿನಾಶ ಜಾಧವ, ಬಸವರಾಜ ಮತ್ತಿಮೂಡ, ಮಾಜಿ ಶಾಸಕ ಡಿ.ಎಸ್.ವೀರಯ್ಯ ಇದ್ದರು. ಸೊಲ್ಲಾಪುರದ ಸಂಸದ ಸಿದ್ದೇಶ್ವರ ಸ್ವಾಮೀಜಿ, ಶಾಂತವೀರ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಣ್ಣಾರಾವ್ ರಾಠೋಡ, ಗುಂಡು ರೆಡ್ಡಿ, ಸುಧೀರ್ ಕಾಡಾದಿ, ಉಮೇಶ ಬೀರಬಿಟ್ಟೆ, ರವಿ ಚಂದನಕೇರೆ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.