ADVERTISEMENT

ಕ.ಕ ಅಭಿವೃದ್ಧಿಗೆ ರಾಜಕಾರಣಿಗಳ ನಿರ್ಲಕ್ಷ್ಯ: ರಮೇಶ ವೀರಾಪೂರ್ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 9:33 IST
Last Updated 12 ಫೆಬ್ರುವರಿ 2020, 9:33 IST
ಬೀದರ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್‌ಎಫ್‌ಐ ವತಿಯಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮಾವೇಶದಲ್ಲಿ ಎಸ್‍ಎಫ್‍ಐ ರಾಜ್ಯ ಸಮಿತಿ ಸದಸ್ಯ ರಮೇಶ ವೀರಾಪೂರ್ ಮಾತನಾಡಿದರು
ಬೀದರ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್‌ಎಫ್‌ಐ ವತಿಯಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮಾವೇಶದಲ್ಲಿ ಎಸ್‍ಎಫ್‍ಐ ರಾಜ್ಯ ಸಮಿತಿ ಸದಸ್ಯ ರಮೇಶ ವೀರಾಪೂರ್ ಮಾತನಾಡಿದರು   

ಬೀದರ್: ಹೈದರಾಬಾದ್ ಕರ್ನಾಟಕ ಭಾಗವನ್ನು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿಗೊಳಿಸದೆ ಕೇವಲ ಕಲ್ಯಾಣ ಕರ್ನಾಟಕವೆಂದು ನಾಮಕರಣ ಮಾಡಲಾಗಿದೆ. ಈ ಭಾಗದ ನೈಜ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲದೆ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ’ ಎಂದು ಎಸ್‍ಎಫ್‍ಐ ರಾಜ್ಯ ಸಮಿತಿ ಸದಸ್ಯ ರಮೇಶ ವೀರಾಪೂರ್ ಅಸಮಾಧಾನ ವ್ಯಕ್ತಪಡಿಸಿದ್ದರು.

ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ 371 (ಜೆ) ಸಮರ್ಪಕ ಜಾರಿ, ಸಮಗ್ರ ಶೈಕ್ಷಣಿಕ ಅಭಿವೃದ್ಧಿ, ಹಾಗೂ ಶಿಕ್ಷಣ ಖಾಸಗೀಕರಣ ವಿರೋಧಿಸಿ ಎಸ್‍ಎಫ್‍ಐ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘371 (ಜೆ) ಜಾರಿಯಾಗಿ ಏಳು ವರ್ಷಗಳೇ ಕಳೆದರೂ ಈ ಭಾಗದ ಮಕ್ಕಳು ಶಿಕ್ಷಣ ಹಾಗೂ ಉದ್ಯೋಗದಿಂದ ವಂಚಿತರಾಗಿದ್ದಾರೆ. ಸರ್ಕಾರದ ಪ್ರತಿ ಬಜೆಟ್‍ನಲ್ಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ಮಂಜೂರು ಮಾಡಿದರೂ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ’ ಎಂದು ಕಿಡಿಕಾರಿದರು.

ADVERTISEMENT

ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಅನಿಲ ಬೆಲ್ದಾರ್‌ ಮಾತನಾಡಿ,‘ 371 (ಜೆ) ಜಾರಿಗಾಗಿ ಅನೇಕ ಮಹನೀಯರು ಹೋರಾಟ ಮಾಡಿದ್ದಾರೆ. ಆದರೆ ಅದರ ಮಹತ್ವ ಮತ್ತು ಇತಿಹಾಸ ವಿದ್ಯಾರ್ಥಿಗಳು ಹಾಗೂ ಈ ಭಾಗದ ಜನರು ತಿಳಿದುಕೊಳ್ಳದೇ 371 (ಜೆ)ನ ಸದುಪಯೋಗ ಪಡೆಯುವಲ್ಲಿ ವಿಫಲರಾಗಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ.ವೀರೇಶ ರಾಂಪೂರ ಮಾತ ನಾಡಿದರು. ಪ್ರಾಧ್ಯಾಪಕ ಶರಣಪ್ಪ.ಎಸ್.ಎಂ. ನಿರೂಪಿಸಿದರು. ಎನ್‌ಎಸ್‌ಎಸ್‌ ಅಧಿಕಾರಿ ಪ್ರೊ.ಬಸವರಾಜ ರಾಜೋಳೆ ವಂದಿಸಿದರು.

ಎಸ್‍ಎಫ್‍ಐ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೊಡಗೆ, ಕಾರ್ಯದರ್ಶಿ ಅವಿನಾಶ ಪಾಟೀಲ, ಅಮರ ಗಾದಗಿ, ಜಾಫರ್‌ ಕಡಿಯಾಳ್, ಮಹೇಶ, ರೋಷನ್ ಮಲ್ಕಾಪುರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.