ಬೀದರ್: 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದ ಬೆಳೆ ಹಾನಿಗೊಳಗಾದ ಜಿಲ್ಲೆಯ 1,98,000 ರೈತರಿಗೆ ತಕ್ಷಣ ಬೆಳೆ ವಿಮೆ ಪರಿಹಾರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಸಂಬಂಧಿಸಿದ ವಿಮಾ ಕಂಪನಿ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಕಟ್ಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ಕುಂದುಕೊರತೆ ನಿವಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2016-17, 2018-19 ಮತ್ತು 2019-20ನೇ ಸಾಲಿನಲ್ಲಿ ಬೆಳೆ ವಿಮೆ ಮಾಡಿಸಿಕೊಂಡ ರೈತರಿಗೆ ಬೆಳೆ ವಿಮೆ ಪರಿಹಾರ ಕಲ್ಪಿಸುವಲ್ಲಿ ವಿಳಂಬ ಆಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
2016-17ನೇ ಸಾಲಿನಲ್ಲಿ ಬಾಕಿ ಇರುವ 33 ರೈತರ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಜೋಡಣೆ ಪ್ರಕ್ರಿಯೆ ತ್ವರಿತವಾಗಿ ನಡೆಸಬೇಕು. 2018-19ನೇ ಸಾಲಿನಲ್ಲಿ 8,076 ರೈತರ ಅರ್ಜಿಗಳನ್ನು ವಿಮಾ ಕಂಪನಿಯವರು ತಿರಸ್ಕರಿಸಿದ್ದು, ಈ ಮಾಹಿತಿಯನ್ನು ಕೂಡಲೇ ಎಲ್ಲ ರೈತರಿಗೆ ತಿಳಿಸಿ, ಅವರಿಂದ ಆಕ್ಷೇಪಣೆ ಇದ್ದರೆ ಪಡೆಯಬೇಕು ಎಂದು ವಿಮಾ ಕಂಪನಿ ಪ್ರತಿನಿಧಿಗಳಿಗೆ ನಿರ್ದೇಶನ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ತಾರಾಮಣಿ ಜಿ.ಎಚ್., ಉಪ ನಿರ್ದೇಶಕರಾದ ಸೋಮಶೇಖರ ಬಿರಾದಾರ, ಸೂರ್ಯಕಾಂತ ಬಿರಾದಾರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುವರ್ಣ ಯದಲಾಪುರೆ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎಂ.ಕಮತಗಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.