ADVERTISEMENT

ಶಿಕ್ಷಕರ ಅರ್ಹತಾ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಡಿಸಿ ರಾಮಚಂದ್ರನ್ ಆರ್.

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 15:22 IST
Last Updated 17 ಆಗಸ್ಟ್ 2021, 15:22 IST

ಬೀದರ್‌: ಆಗಸ್ಟ್ 22ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಎಲ್ಲರೂ ಪರೀಕ್ಷೆಯ ಮಹತ್ವವನ್ನು ಅರಿಯಬೇಕು. ಪರೀಕ್ಷೆಯ ಪಾವಿತ್ರ್ಯ ಕಾಪಾಡಿಕೊಳ್ಳಬೇಕು. ಪರೀಕ್ಷಾ ಮಾರ್ಗಸೂಚಿಗಳ ಪಾಲನೆಗೆ ಮಹತ್ವ ಕೊಡಬೇಕು ಎಂದು ಹೇಳಿದರು.

ADVERTISEMENT

‘ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದಂತೆ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂದು ಜಿಲ್ಲೆಯಲ್ಲಿ 27 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮೊದಲನೇ ಪತ್ರಿಕೆಗೆ 5,624 ಅಭ್ಯರ್ಥಿಗಳು ಹಾಗೂ ಎರಡನೇ ಪತ್ರಿಕೆಗೆ 7,557 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದಾರೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಣ್ಣ ಸ್ವಾಮಿ ತಿಳಿಸಿದರು.

ಭಾನುವಾರ ವಾರಾಂತ್ಯ ಕರ್ಪ್ಯೂ ಇದ್ದರೂ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳಲ್ಲಿ ಯಾವುದೇ ರೀತಿಯ ಗೊಂದಲಬೇಡ. ಅಭ್ಯರ್ಥಿಗಳು ಪರೀಕ್ಷೆಯ ದಿನ ತಮ್ಮಲ್ಲಿರುವ ಗುರುತಿನ ಚೀಟಿಯನ್ನು ತೋರಿಸಿ ಪರೀಕ್ಷೆಗೆ ಹಾಜರಾಗಬಹುದು ಎಂದು ಶಿಕ್ಷಣಾಧಿಕಾರಿ ಟಿ.ಆರ್.ದೊಡ್ಡೆ ತಿಳಿಸಿದರು.

ಸಭೆಯಲ್ಲಿ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಮದಾನೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.