ಚಿಟಗುಪ್ಪ: ‘ಶಿಕ್ಷಕರು ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು. ಆಧುನಿಕ ಶಿಕ್ಷಣದ ಪ್ರಯೋಜನ ಅವರಿಗೂ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.
ಇಲ್ಲಿಯ ಸಂತ ಶಿರೋಮಣಿ ಮಡಿವಾಳೇಶ್ವರ ಗವಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದ ಶನಿವಾರ ನಡೆದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ ಸರಿಯಾದ ಮಾರ್ಗದಲ್ಲಿ ಮುನ್ನಡೆಸುವ ಮೂಲಕ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಂತೆ ಮಾಡುವ ಕೆಲಸ ಗುರಿವಿನ ಮೇಲಿದ್ದು, ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ದಕ್ಷತೆಯಿಂದ ಸೇವೆ ಸಲ್ಲಿಸಬೇಕು’ ಎಂದರು.
ಡಾ.ಬಸವರಾಜ್ ಬಲ್ಲೂರ ವಿಶೇಷ ಉಪನ್ಯಾಸ ನೀಡಿದರು. ಪಟ್ಟಣದ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಶಾಮರಾವ್, ಉಪಾಧ್ಯಕ್ಷೆ ಸೌಭಾಗ್ಯವತಿ ಸ್ವಾಮಿ, ತಹಶೀಲ್ದಾರ್ ರವೀಂದ್ರ ದಾಮಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಂ ಪಾಶಾ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ನಾಗಶೆಟ್ಟಿ ದುಮಣಿ, ಚಿಟಗುಪ್ಪ ಘಟಕದ ರಾಜಕುಮಾರ ಬೇಲೂರೆ, ಶೇಖ ಮಹೇಬೂಬ ಪಟೇಲ್, ಅಶೋಕಕುಮಾರ ಮಹೇಂದ್ರಕರ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜಪ್ಪ ಜಮಾದಾರ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಪ್ರೀತಮಸಿಂಗ್ ಜಾಧವ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸಂಜಯಕುಮಾರ ಎಸ್.ಕಾಂಗೆ, ಸೂರ್ಯಕಾಂತ ಹಾವಶೆಟ್ಟಿ ಹಾಗೂ ರಾಜೇಶ್ವರಿ ಹೂಗಾರ ಇದ್ದರು.
ಅಯ್ಯಪ್ಪ ಸ್ವಾಮಿ ಹಿರೇಮಠ ಸಂಸ್ಥಾನದ ಹಿರಿಯ ಪೀಠಾಧಿಪತಿ ಗುರುಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಎಸ್.ಗೂಡಾಳ ಸ್ವಾಗತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.